ಕೋವಿಡ್ ಲಸಿಕೆ ಹಂಚಿಕೆ ಪ್ರಕ್ರಿಯೆಗೆ 100 ಕೋಟಿ ರೂ. ನೀಡಲಿರುವ ರಾಜ್ಯ ಕಾಂಗ್ರೆಸ್
ಬೆಂಗಳೂರು, ಮೇ 14: ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿಯಂತೆ ಒಟ್ಟು ರೂ. 100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದು ನಮ್ಮ ಆಶಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ದೇಶದ ಪ್ರತಿಯೊಬ್ಬರಿಗೂ ಕೊರೊನಾ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಪರಿಣಾಮಕಾರಿ ಮಾರ್ಗವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟರೊಳಗೆ ಕನಿಷ್ಠ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕೊರೋನ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಬಂದಿರುತ್ತಿತ್ತು ಎಂದು ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಜನ ವ್ಯಾಕ್ಸಿನ್ ಗಾಗಿ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಬಂದಿದೆ. ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ವ್ಯಾಕ್ಸಿನ್ ನೀಡಿಕೆ ಸಂಬಂಧ ಎರಡೂ ಸರ್ಕಾರಗಳಿಗೆ ಛೀಮಾರಿ ಹಾಕಿವೆ. ಇಷ್ಟಾದರೂ ಬಿಜೆಪಿ ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಟೀಕಿಸಿದ್ದಾರೆ.
ರಾಜ್ಯಕ್ಕೆ ವ್ಯಾಕ್ಸಿನ್ ಬರಲು ಇನ್ನು ಹಲವು ತಿಂಗಳುಗಳಾಗಬಹುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಕೊರೊನಾ 3ನೇ ಅಲೆ ಬರಲಿದ್ದು, ಅದರ ಬಗೆಗಿನ ತಜ್ಞರ ಅಭಿಪ್ರಾಯವನ್ನು ಗಮನಿಸಿದರೆ ಮುಂದಿನ ದಿನಗಳ ಬಗ್ಗೆ ಆತಂಕವಾಗುತ್ತದೆ. ಕೊವಿಶೀಲ್ಡ್ ವ್ಯಾಕ್ಸಿನ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರ ಪದೇ ಪದೇ ತನ್ನ ಮಾರ್ಗಸೂಚಿಯನ್ನು ಬದಲಾವಣೆ ಮಾಡುತ್ತಿದೆ. ಮೊದಲ ಹಾಗೂ ಎರಡನೇ ಡೋಸ್ ನಡುವಿನ ಅಂತರ 6-8 ವಾರ ಎಂದು ಈ ಹಿಂದೆ ಹೇಳಿತ್ತು, ಈಗ ಅದನ್ನು 12 ರಿಂದ 16 ವಾರಗಳಿಗೆ ಏರಿಸಿ ಹೊಸ ಮಾರ್ಗಸೂಚಿ ಹೊರಡಿಸಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದೆ. ಇದೊಂದು ವೈಜ್ಞಾನಿಕ ಪ್ರಕ್ರಿಯೆ, ವ್ಯಾಕ್ಸಿನ್ ತಯಾರಿಕಾ ಹಂತದಲ್ಲಿಯೇ ಎರಡು ಡೋಸ್ ಗಳ ನಡುವಿನ ದಿನಗಳ ಅಂತರವನ್ನೂ ನಿರ್ಧರಿಸಲಾಗಿರುತ್ತದೆ, ಹಾಗಿದ್ದಾಗ ಪದೇ ಪದೇ ಬದಲಾವಣೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
18 ರಿಂದ 45ರ ವಯೋಮಿತಿಯ ಜನರ ವ್ಯಾಕ್ಸಿನ್ ಗೆ ರಾಜ್ಯ ಸರ್ಕಾರಗಳೇ ಹಣ ಹಾಕಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ. ಕೇಂದ್ರ ಬಿಜೆಪಿ ಸರ್ಕಾರವೇ ಇಡೀ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮನುಷ್ಯನಾಗಿದ್ದರೆ ಸಾಕು
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು. ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ. ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆಯೂ ಆಗುತ್ತದೆ ಎಂದು ಗೊತ್ತಿಲ್ಲದ ನಿಮ್ಮಂತಹವರನ್ನು ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ'
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರೇ, ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು ಕೂಡಾ, ಅದನ್ನೆಲ್ಲ ಮಾಡಲು ಹೋಗಬೇಡಿ, ಆಡಳಿತ ನಡೆಸುವುದು ನಿಮಗಾಗದ ಕೆಲಸ, ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೊರಟುಬಿಡಿ, ದೇಶಕ್ಕಾಗಿ ಅಷ್ಟು ಮಾಡಿ ಪುಣ್ಯ ಕಟ್ಕೊಳ್ಳಿ
-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿಯಂತೆ ಒಟ್ಟು ರೂ.100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ.
— Siddaramaiah (@siddaramaiah) May 14, 2021
ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದು ನಮ್ಮ ಆಶಯ. 1/7#VaccineForAll