ಸಂಕಷ್ಟದಲ್ಲಿರುವ ಮೀನುಗಾರರು, ತಗ್ಗು ಪ್ರದೇಶದ ಜನರ ರಕ್ಷಣೆಗೆ ಕೂಡಲೇ ವ್ಯವಸ್ಥೆ ಮಾಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ತೌಕ್ತೆ ಚಂಡಮಾರುತದ ಹಿನ್ನೆಲೆ
ಬೆಂಗಳೂರು, ಮೇ 16: ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಸಂಕಷ್ಟದಲ್ಲಿ ಸಿಲುಕಿರುವ ಮೀನುಗಾರರ ರಕ್ಷಣೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರವಿವಾರ ಸಂಜೆ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಉಡುಪಿ, ಕಾರವಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಯಡಿಯೂರಪ್ಪ, ತೌಕ್ತೆ ಚಂಡಮಾರುತದಿಂದ ಆದ ಹಾನಿಯ ಬಗ್ಗೆ ಮಾಹಿತಿ ಪಡೆದರು. ಮಂಗಳೂರು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ, ಸಮುದ್ರದಲ್ಲಿ ಸಿಕ್ಕಿಹಾಕಿಕೊಂಡಿರುವ ಮೀನಿಗಾರರ ರಕ್ಷಣೆಗೆ ಆಸ್ಥೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ತಗ್ಗು ಪ್ರದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಹೆಲಿಕಾಪ್ಟರ್ ಸೇರಿದಂತೆ ಇನ್ನಿತರ ಯಾವುದೇ ಅಗತ್ಯವಿದ್ದರು ಕೂಡಲೇ ವ್ಯವಸ್ಥೆ ಮಾಡಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ಸಂಭವಿಸದಂತೆ ಸೂಕ್ತ ಮುನ್ನಚ್ಚರಿಕೆ ವಹಿಸಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಗೊತ್ತಾಗಿದೆ.