ವಯಸ್ಸಿನ ಕಾರಣ ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಇಳಿಸಬೇಕೆಂಬುದು ಸರಿಯಲ್ಲ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಮೇ 29: `ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ನಾಯಕತ್ವ ಬದಲಾವಣೆ ಸಂಬಂಧ ನನ್ನ ಬಳಿ ಯಾರೊಬ್ಬರೂ ಚರ್ಚೆ ಮಾಡಿಲ್ಲ. ವಯಸ್ಸಿನ ಕಾರಣ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಬೇಕೆಂಬುದು ಸರಿಯಲ್ಲ' ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದಿಲ್ಲಿ ಆಕ್ಷೇಪಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ರಾಜ್ಯದ ಕೆಲ ಮುಖಂಡರು ಹೊಸದಿಲ್ಲಿಗೆ ಬಂದಿದ್ದರು. ಆದರೆ, ದಿಲ್ಲಿಯಲ್ಲಿ ನನ್ನನ್ನು ಯಾರೂ ಭೇಟಿಯಾಗಿಲ್ಲ. ಅವರು ಎಲ್ಲಿಗೆ ಹೋಗಿದ್ದರು, ಯಾರನ್ನ ಭೇಟಿಯಾಗಿದ್ದರೂ ಎಂಬುದು ನನಗೆ ಗೊತ್ತಿಲ್ಲ' ಎಂದು ಸ್ಪಷ್ಟನೆ ನೀಡಿದರು.
`ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಬಿಟ್ಟರೆ ಸಿಎಂ ಆಗಲು ಸಮರ್ಥರಿಲ್ಲ' ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, `ಕಾಂಗ್ರೆಸ್ ಪಕ್ಷದಲ್ಲಿ ಸಮರ್ಥರು ಅಂತಲೇ ಬಡಿದಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ನಮ್ಮ ಆದ್ಯತೆ ಕೋವಿಡ್ ಸೋಂಕು ನಿವಾರಣೆ ಮತ್ತು ಸಂಕಷ್ಟಕ್ಕೆ ಸಿಲುಕಿರುವ ಆರ್ಥಿಕ ಸ್ಥಿತಿ ಸುಧಾರಣೆ ಎಂದು ಅವರು ಪ್ರತಿಕ್ರಿಯೆ ನೀಡಿದರು.