ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕಾಗಿ ನಿಗದಿಪಡಿಸಿದ್ದ 1,800 ಕೋಟಿ ರೂ. ಟೆಂಡರ್ ರದ್ದು: ಹೈಕೋರ್ಟ್ ಅಸಮಾಧಾನ
ಬೆಂಗಳೂರು, ಜೂ. 1: ಆ್ಯಂಬುಲೆನ್ಸ್ ಗಳ ಸುಗಮ ಸಂಚಾರಕ್ಕಾಗಿ ನಿಗದಿಪಡಿಸಿದ್ದ 1,800 ಕೋಟಿ ರೂ. ಟೆಂಡರ್ ಅನ್ನು ಆರೋಗ್ಯ ಸಚಿವರ ಸೂಚನೆಯಂತೆ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಭಾರತ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಯಾವುದೇ ಕಾರಣವಿಲ್ಲದೆ ಜನೋಪಯೋಗಿ ಟೆಂಡರ್ ಪ್ರಕ್ರಿಯೆ ರದ್ದು ಮಾಡಿದ್ದಕ್ಕೆ ಹೊಣೆ ಯಾರು? ಈ ಬಗ್ಗೆ ಸಾರ್ವಜನಿಕರಿಗೆ ಸರಕಾರ ಉತ್ತರ ಹೇಳಬೇಕು. ಟೆಂಡರ್ ಆಗಿದ್ದರೆ ಇಷ್ಟು ಹೊತ್ತಿಗೆ ಆ್ಯಂಬುಲೆನ್ಸ್ ಲಭ್ಯವಾಗುತ್ತಿತ್ತು. ಕೊರೋನ ಸಾಂಕ್ರಾಮಿಕದ ಸಂದರ್ಭದಲ್ಲಿ ನೆರವಾಗುತ್ತಿತ್ತು ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.
ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ಸರಕಾರದ ಕ್ರಮದ ಬಗ್ಗೆ ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿತು.
Next Story