ವಿಜಯೇಂದ್ರ ಖಾಸಗಿ ಕಾರ್ಯಕ್ರಮ ನಿಮಿತ್ತ ದಿಲ್ಲಿಗೆ ಹೋಗಿದ್ದರು: ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಜೂ. 4: `ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಾಸಗಿ ಕಾರ್ಯಕ್ರಮ ನಿಮಿತ್ತ ಹೊಸದಿಲ್ಲಿಗೆ ತೆರಳಿದ್ದು, ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಸಂಬಂಧ ಎಲ್ಲಿಯೂ ಪ್ರಸ್ತಾವ ಮಾಡಿಲ್ಲ' ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನಮ್ಮೆಲ್ಲರ ಸರ್ವಸಮ್ಮತ ನಾಯಕರು. ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಕುರಿತು ಒಬ್ಬ ಶಾಸಕ ಮಾತನಾಡಲು ಸಾಧ್ಯವಿಲ್ಲ. ಪಕ್ಷದ ಎಲ್ಲ ಶಾಸಕರು ಹಾಗೂ ಹೈಕಮಾಂಡ್ ಸೇರಿ ತೀರ್ಮಾನ ಮಾಡಬೇಕಾಗುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡದಂತೆ ಎಲ್ಲ ಶಾಸಕರಿಗೂ ಸೂಚಿಸಿದ್ದೇನೆ ಎಂದರು.
ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ಗಂಭೀರ ಸ್ವರೂಪದಲ್ಲಿದ್ದು, ಈ ಕುರಿತು ನಮ್ಮ ಆದ್ಯತೆ. ಅದನ್ನು ಮೀರಿ ಬೇರೆ ಏನಾದರು ಮಾತನಾಡಿದರೆ ಪಕ್ಷ ಎಲ್ಲವನ್ನು ಗಮನಿಸುತ್ತದೆ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಈಗಾಗಲೇ ನಾನು ಕರೆ ಮಾಡಿ ಎಲ್ಲರ ಜೊತೆ ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.