ರಾಜ್ಯದಲ್ಲಿ ಒಟ್ಟು 1,784 ಬ್ಲ್ಯಾಕ್ ಫಂಗಸ್ ಪ್ರಕರಣ, 111 ಮಂದಿ ಸಾವು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜೂ. 5: ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ 1,784 ಪ್ರಕರಣ ಕಂಡುಬಂದಿದೆ. ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ. ಈಗಾಗಲೇ 62 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆದರೆ, ದುರದೃಷ್ಟ 111 ಮಂದಿ ಸಾವಿಗೀಡಾಗಿದ್ದಾರೆಂದು ಹೇಳಿದರು.
ಕಪ್ಪು ಶಿಲೀಂಧ್ರ ಸೋಂಕಿಗೆ ಆಂಫೋಟೆರಿಸಿನ್ ಬಿ-ಔಷಧಿ ವೈಲ್ ಬೇಕಾಗುತ್ತದೆ. ಕೇಂದ್ರ ಸರಕಾರವು 9,750 ವೈಲ್ಗಳನ್ನು ರಾಜ್ಯಕ್ಕೆ ಹಂಚಿಕೆ ಮಾಡಿದೆ. ಇದರಲ್ಲಿ 8,860 ವೈಲ್ ನಿನ್ನೆ ಬಂದಿದೆ. ಒಟ್ಟು 18,650 ವೈಲ್ಗಳು ರಾಜ್ಯಕ್ಕೆ ದೊರೆತಿದೆ. ಸರಕಾರಿ ಆಸ್ಪತ್ರೆಗಳಿಗೆ 8,860 ವೈಲ್ಗಳನ್ನು ಬಳಸಲಾಗಿದೆ. ಖಾಸಗಿ ಆಸ್ಪತ್ರೆಗಳು ಸೇರಿ ಬೇರೆ ಕಡೆಗಳಿಗೆ 9,740 ವೈಲ್ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕೋವಿಡ್ ಲಸಿಕೆಯ 58 ಲಕ್ಷ ಡೋಸ್ಗಳನ್ನು ನೀಡಲಾಗುವುದು. 70-75 ಲಕ್ಷ ಜನರಿಗೆ ಇದೇ ತಿಂಗಳಲ್ಲಿ ಲಸಿಕೆ ಹಾಕಲಾಗುವುದು. ರಾಜ್ಯದಲ್ಲಿ ಈವರೆಗೆ 1.5 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಜೂನ್ ಅಂತ್ಯಕ್ಕೆ ರಾಜ್ಯದ 2.25 ಕೋಟಿ ಜನರಿಗೆ ಲಸಿಕೆ ನೀಡಲಾಗುವುದು. ಆದಷ್ಟು ಶೀಘ್ರದಲ್ಲೇ ಎಲ್ಲರಿಗೂ ಲಸಿಕೆ ದೊರೆಯಲಿದೆ ಎಂದು ಸಚಿವ ಸುಧಾಕರ್ ಇದೇ ವೇಳೆ ಅಭಯ ನೀಡಿದರು.
ಆಯುಷ್ಮಾನ್ ಭಾರತ್ನಡಿ ಚಿಕಿತ್ಸೆ: ಬಡ-ಮಧ್ಯಮ ವರ್ಗದವರು ಸರಕಾರಿ ಆಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಕಪ್ಪು ಶಿಲೀಂಧ್ರಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಹಿಂದೆಯೇ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಘೋಷಿಸಿದ್ದಾರೆ. ಒಬ್ಬರಿಗೆ 2-3 ಲಕ್ಷ ರೂ.ಖರ್ಚಾಗಲಿದ್ದು, ಸರಕಾರವೇ ಭರಿಸುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಉಚಿತವಾಗಿ ನೀಡಲು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕದಡಿ ಚಿಕಿತ್ಸೆ ನೀಡಬೇಕೆಂದು ಸಲಹೆ ಬಂದಿದೆ. ಈ ಕುರಿತು ಮಾತುಕತೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಆಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಕೇಂದ್ರ ರೂಪಿಸಲಾಗಿದೆ. ಕೋವಿಡ್ನಿಂದ ಗುಣಮುಖರಾದವರಿಗೆ ಬೇರೆ ಸೋಂಕಿನ ಲಕ್ಷಣ ಕಂಡುಬಂದಾಗ, ಅದಕ್ಕೆ ಬೇಕಾದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಚಿಕಿತ್ಸೆಯ ಕುರಿತು ವೈದ್ಯರಿಗೂ ತರಬೇತಿ ನೀಡಲಾಗುತ್ತಿದೆ. ಗುಣಮುಖರಾದ ಎಲ್ಲರಿಗೂ ಅಡ್ಡ ಪರಿಣಾಮ ಬರುವುದಿಲ್ಲ. ದೀರ್ಘ ಕಾಲ ಐಸಿಯುನಲ್ಲಿರುವವರು, ಹೆಚ್ಚು ಸ್ಟೀರಾಯಿಡ್ ಪಡೆದವರಲ್ಲಿ ಕೆಲವರಿಗೆ ಮಾತ್ರ ದುಷ್ಪರಿಣಾಮವಾಗುತ್ತಿದೆ. ಅದಕ್ಕೆ ಚಿಕಿತ್ಸೆ ನೀಡಲು ಬೇಕಾದ ಸಿದ್ಧತೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಜೂನ್ ಅಂತ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಬಹುದು. ಆದರೆ, ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಅವರು, ಒಂದೂವರೆ ಕೋಟಿ ಕೋವಿಡ್ ಲಸಿಕೆ ಉಚಿತವಾಗಿಯೇ ನೀಡಿದ್ದೇವೆ. ಹೆಪಟೈಟಿಸ್-ಬಿ ಲಸಿಕೆ 1982ರಲ್ಲಿ ಪರಿಚಯವಾದರೂ, ಭಾರತಕ್ಕೆ 2002ರಲ್ಲಿ ಬಂತು. ಒಂದು ಲಸಿಕೆ ಬರಲು 20ವರ್ಷ ಬೇಕಾಯಿತು. ಕೊರೊನ ಲಸಿಕೆ ದೇಶೀಯವಾಗಿಯೇ ತಯಾರಾಗಿದೆ. ಇದರಲ್ಲೂ ರಾಜಕಾರಣ ಮಾಡಿದರೆ ಜನರೇ ಛೀಮಾರಿ ಹಾಕುತ್ತಾರೆ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.