17 ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ: ಈಶ್ವರಪ್ಪರಿಗೆ ಬಿ.ಸಿ.ಪಾಟೀಲ್ ತಿರುಗೇಟು
ಮೈಸೂರು,ಜೂ.15: ಹೊರಗಿನಿಂದ ಬಂದ 17 ಶಾಸಕರುಗಳು ರಾಜೀನಾಮೆ ನೀಡಿ ಬಂದಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾರೆ ಎಂದು ಸಚಿವ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದರು.
ನಗರದ ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಂಗಳವಾರ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ನಂತರ ಅವರು ಮಾತನಾಡಿದರು. ಹೊರಗಿನಿಂದ ಬಂದ ಹದಿನೇಳು ಜನರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದು. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿರುವುದು. ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಸಚಿವರಾಗಿರುವುದು ಎಂದ ಅವರು, ಶಾಸಕ ಮುನಿರತ್ನ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರಿಗೂ ಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಪದೇ ಪದೇ ನಾಯಕತ್ವ ಬದಲಾವಣೆ ವಿಚಾರ ಮುಂಚೂಣಿಗೆ ಬರುತ್ತಿರುವುದು ಸರಿಯಲ್ಲ, ಈ ಸಂಬಂಧ ಹೈಕಮಾಂಡ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. ಇನ್ನೆರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ. ನಾಳೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯದಲ್ಲಿನ ಆಡಳಿತ ನಾಯಕತ್ವ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ನಮ್ಮ ಪಕ್ಷದ ಆಂತರಿಕ ವಿಚಾರವನ್ನು ಪಕ್ಷದ ಒಳಗೆ ಬಗೆಹರಿಸುವುದಾಗಿ ಹೇಳಿದರು.