ಕರ್ತವ್ಯ ನಿರತ ಪೊಲೀಸ್ ಗೆ ನಿಂದಿಸಿ, ಹಲ್ಲೆ ಆರೋಪ: ಪ್ರಕರಣ ದಾಖಲು
ಶಿವಮೊಗ್ಗ, ಜೂ.18: ಕರ್ತವ್ಯ ನಿರತ ಪೊಲೀಸ್ ಕಾನ್ಸ್ಟೇಬಲ್ಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂಭಾಗ ಘಟನೆ ನಡೆದಿದೆ. ಕುಂಸಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಪ್ರವೀಣ್ ಮೇಲೆ ಹಲ್ಲೆ ಮಾಡಲಾಗಿದೆ. ಮಂಜುನಾಥ ಎಂಬಾತ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಏನು: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಬಂದೋಬಸ್ತ್ ಡ್ಯೂಟಿಗಾಗಿ ಕಾನ್ಸ್ಟೇಬಲ್ ಪ್ರವೀಣ್ ಅವರನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆಯ ವಿಡಿಯೋ ರೆಕಾರ್ಡಿಂಗ್ ಮಾಡುತ್ತಿದ್ದಾಗ ದಿಢೀರ್ ಆಗಿ ಪ್ರವೀಣ್ ಅವರ ಎದುರಿಗೆ ಬಂದ ಮಂಜುನಾಥ್, ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರು ಮತ್ತು ಇತರೆ ಪೊಲೀಸರ ನೆರವಿನಿಂದಾಗಿ ಮಂಜುನಾಥನನ್ನು ಹಿಡಿದು ಠಾಣೆಗೆ ಕರೆದೊಯ್ಯಲಾಗಿದೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.