'ನೀರಾವರಿ ಇಲಾಖೆಯಲ್ಲಿ ಅಕ್ರಮ' ಎಂಬ ಎಚ್.ವಿಶ್ವನಾಥ್ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ ರಾಜ್ಯ ಸರಕಾರ
ಬೆಂಗಳೂರು, ಜೂ.18: ರಾಜ್ಯದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಎಲ್ಲ ಟೆಂಡರ್ ಪ್ರಕ್ರಿಯೆಗಳನ್ನು ಅತ್ಯಂತ ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದೆ. ಅಲ್ಲದೆ, ಯಾವುದೇ ಅಕ್ರಮಗಳು ನಡೆದಿಲ್ಲ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.
ಶಾಸಕ ಎಚ್.ವಿಶ್ವನಾಥ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಜಲ ಸಂಪನ್ಮೂಲ ಇಲಾಖೆಯ ಸರಕಾರದ ಕಾರ್ಯದರ್ಶಿ ಲಕ್ಷ್ಮಣ್ ರಾವ್ ಪೇಶ್ವೆ, ಭದ್ರಾ ಮೇಲ್ದಂಡೆ ಮತ್ತು ಕಾವೇರಿ ನೀರಾವರಿ ಯೋಜನೆಗಳಿಗೆ ಆರ್ಥಿಕ ಇಲಾಖೆಯ ಸಹಮತಿ ಹಾಗೂ ಸಮ್ಮತಿ ಇಲ್ಲದೆಯೇ 20 ಸಾವಿರ ಕೋಟಿ ರೂ. ಟೆಂಡರ್ ಆಹ್ವಾನಿಸಿರುವುದಾಗಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 21,473.67 ಕೋಟಿ ರೂ.ಮೊತ್ತದ ಸಮಗ್ರ ಪರಿಷ್ಕೃತ ಯೋಜನಾ ವರದಿಯ ಶಿಫಾರಸ್ಸಿನ ಅನ್ವಯ ಸರಕಾರವು 2020ರ ಡಿ.16ರಂದು ಆರ್ಥಿಕ ಇಲಾಖೆ ಸಹಮತಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಡಿ.24ರಂದು ನಡೆದ ಕೇಂದ್ರ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯಲ್ಲಿ ಈ ಯೋಜನೆಗೆ 16125.48 ಕೋಟಿ ರೂ. ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯಡಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ ಬರಪೀಡಿತ ಮಧ್ಯ ಕರ್ನಾಟಕದ ಬವಣೆ ನೀಗಿಸುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿತ್ತು ಎಂದು ಲಕ್ಷ್ಮಣ ರಾವ್ ಪೇಶ್ವೆ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಮಾ.25ರಂದು ನಡೆದ ಸಭೆಯಲ್ಲಿ ಈ ಕಡತವನ್ನು ಕೇಂದ್ರ ಸರಕಾರದ ಹೂಡಿಕೆ ತೀರುವಳಿ ಮಂಡಳಿ(ಇನ್ವೆಸ್ಟ್ ಮೆಂಟ್ ಕ್ಲಿಯರೆನ್ಸ್ ಬೋರ್ಡ್)ಗೆ ನೀಡಲಾಗಿದೆ. ಪ್ರಸ್ತುತ ಉನ್ನತಾಧಿಕಾರ ಸಮಿತಿಯ ಮುಂದೆ ತಿರುವಳಿಗಾಗಿ ಪ್ರಸ್ತಾವನೆ ಸಲ್ಲಿಕೆ ಹಂತದಲ್ಲಿ ಇದೆ ಎಂದು ಲಕ್ಷ್ಮಣ್ ರಾವ್ ಪೇಶ್ವೆ ಸ್ಪಷ್ಟನೆ ನೀಡಿದ್ದಾರೆ.
ಈ ಯೋಜನೆಗೆ ಸಂಬಂಧಿಸಿದಂತೆ 2020ರ ಡಿ.2ರಲ್ಲಿ ನಡೆದ ನಿರ್ದೇಶಕ ಮಂಡಳಿಯ 16ನೆ ಸಭೆಯಲ್ಲಿ ಮಂಜೂರಾತಿ ಪಡೆಯಲಾಗಿದೆ. ಅಲ್ಲದೆ, 21,473 ಕೋಟಿ ರೂ. ಯೋಜನೆಗೆ ಸರಕಾರದಲ್ಲಿ ಅನುದಾನವಿಲ್ಲ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿರುವ ಅವರು, ಈ ಯೋಜನೆಯು ಆರ್ಥಿಕ ಇಲಾಖೆಯ ಸಹಮತಿ ಮತ್ತು ಸಮ್ಮತಿಯೊಂದಿಗೆ ಅನುಮೋದಿತವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯ ಜಾರಿಗೆ ಕೇಂದ್ರ ಸರಕಾರವು ರಾಷ್ಟ್ರೀಯ ಯೋಜನೆಯಡಿ 16,125.4 ಕೋಟಿ ರೂ.ಗಳನ್ನು ಭರಿಸಲಿದೆ. ಈ ಯೋಜನೆಯನ್ನು 2023-24ರೊಳಗೆ ಪೂರ್ಣಗೊಳಿಸುವ ಷರತ್ತಿನೊಂದಿಗೆ ಕೇಂದ್ರ ಸರಕಾರವು ಅನುದಾನ ಮಂಜೂರು ಮಾಡಿದೆ. ಹೀಗಾಗಿ ಈ ಯೋಜನೆಯ ಜಾರಿಗೆ ಆರ್ಥಿಕ ಸಂಪನ್ಮೂಲದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
0 ಸಾವಿರ ಕೋಟಿ ರೂ. ಟೆಂಡರ್ ಕರೆದಿದ್ದು ಇದಕ್ಕೆ ಅನುಮತಿ ಇಲ್ಲ ಎಂಬ ಆರೋಪಕ್ಕೆ ಉತ್ತರಿಸಿರುವ ಲಕ್ಷ್ಮಣ ರಾವ್ ಪೇಶ್ವೆ, ಮಾ.25ರಂದು ಜರುಗಿದ ಸಭೆಯಲ್ಲಿ ಕೇಂದ್ರ ಸರಕಾರದ ಷರತ್ತುಗಳಿಗೆ ಒಳಪಟ್ಟು ಅನುಮೋದನೆ ನೀಡಲಾಗಿದೆ. ಎಲ್ಲ ಕಾಮಗಾರಿಗಳನ್ನು 2023-24ನೆ ಸಾಲಿನ ಒಳಗೆ ಪೂರ್ಣಗೊಳಿಸಬೇಕಿರುವುದರಿಂದ ಡ್ರಿಪ್ ಕಾಮಗಾರಿ ಅಂದಾಜು ಪಟ್ಟಿಗಳನ್ನು ಡ್ರಿಪ್ ಸಮಿತಿಯ ಐದು ಸಭೆಗಳಲ್ಲಿ ಸವಿವರವಾಗಿ ಚರ್ಚಿಸಿ ಹಾಗೂ ನಿಗಮದ ಅಂದಾಜು ಪರಿಶೀಲನಾ ಸಮಿತಿಯಿಂದ ಅನುಮತಿ ಪಡೆದು ರಾಜ್ಯ ಸಾರ್ವಜನಿಕ ಸಂಗ್ರಹಗಳಲ್ಲಿನ ಖರೀದಿಗಳಲ್ಲಿ ಪಾರದರ್ಶಕತಾ ಅಧಿನಿಯಮದಲ್ಲಿನ ನಿಯಮಾನುಸಾರ 4026.60 ಕೋಟಿ ರೂ.ಮೊತ್ತಕ್ಕೆ ಏಳು ಪ್ಯಾಕೇಜ್ಗಳಲ್ಲಿ ಟೆಂಡರ್ ಆಹ್ವಾನಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಇದು ಪ್ರಕ್ರಿಯೆಯ ವಿವಿಧ ಹಂತಗಳಲ್ಲಿವೆ. ಕೋವಿಡ್-19 ರ ಹಿನ್ನೆಲೆಯಲ್ಲಿ ಕಳೆದ ವರ್ಷ ಟೆಂಡರ್ ಪ್ರಕ್ರಿಯೆ ಮಾಡಲಾಗಿಲ್ಲ. ಹೀಗಾಗಿ ಪ್ರಸ್ತುತ ಟೆಂಡರ್ ಪ್ರಕ್ರಿಯೆಗಳು ಚಾಲ್ತಿಯಲ್ಲಿ ಈ ಯೋಜನೆಯ ಜಾರಿಗೆ ಸಚಿವ ಸಂಪುಟದ ಅನುಮೋದನೆಯನ್ನು ಪಡೆಯಲಾಗಿದೆ ಎಂದು ಲಕ್ಷ್ಮಣ್ ರಾವ್ ಪೇಶ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.