ಸೌಹಾರ್ದತೆಗಾಗಿ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ವಾಪಸ್: ಹೈಕೋರ್ಟ್ ಗೆ ಸರಕಾರದ ಹೇಳಿಕೆ
ಬೆಂಗಳೂರು, ಜೂ.18: ಶಾಸಕರು, ಸಚಿವರು ಸೇರಿ ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳುವುದರ ಉದ್ದೇಶ ಸಮಾಜದಲ್ಲಿ ಸೌಹಾರ್ದತೆ ಕಾಪಾಡುವುದಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ ಗೆ ತಿಳಿಸಿದೆ.
ಕಳೆದ 7 ವರ್ಷದಲ್ಲಿ ರಾಜ್ಯಾದ್ಯಂತ ವಿವಿಧ ಕ್ರಿಮಿನಲ್ ಕೋರ್ಟ್ಗಳಲ್ಲಿ ವಿಚಾರಣಾ ಹಂತದಲ್ಲಿದ್ದ ಒಟ್ಟು 570 ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಸರಕಾರ ಹಿಂಪಡೆದಿದೆ ಎಂದು ಆರೋಪಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್(ಪಿಸಿಯುಎಲ್) ಮತ್ತು ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಿ ಸರಕಾರ ಈ ಸಮರ್ಥನೆ ನೀಡಿದೆ.
ಅರ್ಜಿ ವಿಚಾರಣೆ ವೇಳೆ ಸರಕಾರದ ಪರ ವಕೀಲರು ಲಿಖಿತ ಆಕ್ಷೇಪಣೆಗಳನ್ನು ಸಲ್ಲಿಸಿದರು. ಅಲ್ಲದೆ, ಈ ಪ್ರಕರಣದಲ್ಲಿ ರಾಜ್ಯ ಸರಕಾರದ ಪರ ಅಡ್ವಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಕಾಲಾವಕಾಶ ನೀಡಬೇಕೆಂದು ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಜು.15ಕ್ಕೆ ಮುಂದೂಡಿತು.