ಸಕಲೇಶಪುರ: ಮುಸ್ಲಿಂ ಲೀಗ್ ಮುಖಂಡನ ಮೇಲೆ ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು
ಸಕಲೇಶಪುರ, ಜೂ.18: ಸಾಮಾಜಿಕ ಮಾಧ್ಯಮದಲ್ಲಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಮುಸ್ಲಿಂ ಲೀಗ್ ಮುಖಂಡರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಆನೆಮಹಲ್ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಆನೆಮಹಾಲ್ ಗ್ರಾಪಂ ನಿವಾಸಿ ಶಾಹುಲ್ ದಾರಿಮಿ ಉಸ್ತಾದ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಇವರು ಹಾಸನ ಜಿಲ್ಲಾ ಮುಸ್ಲಿಂ ಲೀಗ್ ಯುವ ಘಟಕದ ಅಧ್ಯಕ್ಷ ಹಾಗೂ ಎಸ್ಕೆ ಎಸ್ಸೆಸ್ಸೆಫ್ ಜಿಲ್ಲಾ ಕಾರ್ಯದರ್ಶಿಯಾಗಿದ್ದಾರೆ. ಹಲ್ಲೆಯಿಂದ ಶಾಹುಲ್ ದಾರಿಮಿ ಅವರ ತಲೆಗೆ ಗಂಭೀರ ಗಾಯವಾಗಿದೆ ಎನ್ನಲಾಗಿದ್ದು, ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಸಿರ್, ಮನ್ಸೂರ್ ಮತ್ತು ರಫೀಕ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇವರ ವಿರುದ್ಧ ಪಟ್ಟಣದ ಠಾಣೆಯಲ್ಲಿ ಕಲಂ 307ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆನೆಮಹಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ವಿದ್ಯುತ್ ಕಡಿತವಾದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ನಡೆದಿದ್ದು, ಇದೇ ವಿಚಾರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.