ಕೋವಿಡ್ ಲಾಕ್ಡೌನ್ ಸಡಿಲಿಕೆ: ಬಸ್ ಸಂಚಾರ ಆರಂಭಿಸುವ ಬಗ್ಗೆ ಸಾರಿಗೆ ಸಚಿವ ಸವದಿ ಹೇಳಿದ್ದೇನು ?
ಬೆಂಗಳೂರು, ಜೂ. 19: `ರಾಜ್ಯದಲ್ಲಿ ಕೋವಿಡ್ ಲಾಕ್ಡೌನ್ ಜೂ.21ರಿಂದ ಸಡಿಲಿಕೆಯಾಗಲಿದ್ದು, ಆ ಬಳಿಕ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸಹಿತ ಸಾರಿಗೆ ಬಸ್ ಸಂಚಾರ ಆರಂಭಿಸಲು ಸಾರಿಗೆ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ' ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಬಸ್ ಸಂಚಾರ ಆರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ಸಮ್ಮತಿಸಿದರೆ ಮಾತ್ರ ಸಾರಿಗೆ ವಾಹನಗಳನ್ನು ರಸ್ತೆಗೆ ಇಳಿಸಲಾಗುವುದು ಎಂದು ಇದೇ ವೇಳೆ ಸ್ಪಷ್ಟನೆ ನೀಡಿದರು.
ಸಾರಿಗೆ ಬಸ್ ಸಂಚಾರ ಆರಂಭಿಸಲು ಇಲಾಖೆ ಚಾಲಕರು ಮತ್ತು ನಿರ್ವಾಹಕರಿಗೆ ಕೋವಿಡ್ನ ಎರಡು ಡೋಸ್ ಲಸಿಕೆ ಕೊಡಿಸಿದ್ದು, ಆ ಸಿಬ್ಬಂದಿಯನ್ನು ಮಾತ್ರ ಸೇವೆಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಶೇ.50ರಷ್ಟು ಸೀಟುಗಳ ಭರ್ತಿಗೆ ಅವಕಾಶ ಕಲ್ಪಿಸಿ ಬಸ್ ಸಂಚಾರ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೆಚ್ಚುವರಿ ಪ್ರಮಾಣಕ್ಕೆ ಅನುವು ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.