ನಾಲ್ವಡಿ ಕೃಷ್ಣರಾಜ ದತ್ತಿ ಪ್ರಶಸ್ತಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮೋಹನ್ ಆಳ್ವ ಆಯ್ಕೆ
ಡಾ.ಜಿ.ಎಸ್.ಕಾಪಸೆ ಅವರಿಗೆ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ದತ್ತಿ ಪ್ರಶಸ್ತಿ
ಮೋಹನ್ ಆಳ್ವ
ಬೆಂಗಳೂರು, ಜೂ.22: ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ 2021ನೇ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಹಾಗೂ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಡಾ.ಜಿ.ಎಸ್.ಕಾಪಸೆ ಆಯ್ಕೆಯಾಗಿದ್ದಾರೆಂದು ಕಸಾಪ ಗೌರವ ಕಾರ್ಯದರ್ಶಿ ಕೆ.ರಾಜಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ಮೇಲಿನ ಇಬ್ಬರು ಸಾಧಕರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯು 51ಸಾವಿರ ರೂ.ನಗದು ಹಾಗೂ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ಪ್ರಶಸ್ತಿ 10 ಸಾವಿರ ರೂ.ನಗದು, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಕ್ರಮವಾಗಿ ಜು.1 ಹಾಗೂ ಜು.7ರಂದು ನಗರದ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆಯ್ಕೆ ಸಮಿತಿ ಸಭೆಯಲ್ಲಿ ಕಸಾಪ ಸದಸ್ಯರಾದ ಚಿತ್ಕಲಾ, ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್, ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರೆಂದು ಅವರು ತಿಳಿಸಿದ್ದಾರೆ.