ನನ್ನನ್ನು ಬಿಟ್ಟು ಸಂಪುಟ ರಚನೆ ಮಾಡುವುದಿಲ್ಲ ಎಂಬ ಭರವಸೆ ಇದೆ: ಉಮೇಶ್ ಕತ್ತಿ
ಹೊಸದಿಲ್ಲಿ, ಜು. 29: `ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಮಂತ್ರಿ ಆಗಿರುತ್ತೇನೆಂಬ ವಿಶ್ವಾಸವಿದೆ. ನನ್ನನ್ನು ಬಿಟ್ಟು ಅವರು ಸಂಪುಟ ರಚನೆ ಮಾಡುವುದಿಲ್ಲ ಎಂಬ ಭಾವನೆ ಇದೆ. ಈ ಹಿಂದೆ ನಾಲ್ಕು ಬಾರಿ ಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಸಚಿವನಾಗಿರುತ್ತೇನೆಂಬ ನಂಬಿಕೆ ಇದೆ. ಅಖಂಡ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸುತ್ತೇನೆ' ಎಂದು ಮಾಜಿ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯಿಸಿದ್ದಾರೆ.
ಗುರುವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಯಾಗದಿದ್ದರೆ ಶಾಸಕನಾಗಿ ಮುಂದುವರಿಯುತ್ತೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಮುಖಂಡ ಬಿ.ಎಲ್.ಸಂತೋಷ್ ಭೇಟಿಗೆ ಸಮಯ ಕೇಳಿದ್ದೇನೆ. ಅವಕಾಶ ಸಿಕ್ಕಲ್ಲಿ ಭೇಟಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಹಿರಿಯ ನಾಯಕರನ್ನು ಕೈಬಿಟ್ಟು ಹೊಸಬರಿಗಷ್ಟೇ ಅವಕಾಶ ನೀಡಲಾಗುತ್ತದೆ ಎಂಬುದು ಕೇವಲ ಮಾಧ್ಯಮದ ವರದಿಯಷ್ಟೇ. ಪ್ರಾದೇಶಿಕತೆ, ಸಾಮಾಜಿಕ ನ್ಯಾಯವನ್ನು ಆಧರಿಸಿ ಸಚಿವ ಸ್ಥಾನ ನೀಡಲಿದ್ದಾರೆ ಎಂದ ಉಮೇಶ್ ಕತ್ತಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ವೈಯಕ್ತಿಕ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕರಿಸಿದರು.