ದಕ್ಷಿಣ ಕನ್ನಡ ಸೇರಿದಂತೆ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ: ಮುಖ್ಯಮಂತ್ರಿ ಬೊಮ್ಮಾಯಿ
ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ
ಹೊಸದಿಲ್ಲಿ, ಜು.30: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಗಡಿ ಭಾಗದಲ್ಲಿ ಕೋವಿಡ್ ಪರೀಕ್ಷೆ, ಲಸಿಕೆ, ತಪಾಸಣೆ ವಿಚಾರದಲ್ಲಿ ಮತ್ತಷ್ಟು ಬಿಗಿಯಾದ ಕ್ರಮಗಳನ್ನು ಕೈಗೊಳ್ಳುವಂತೆ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಭಾಗದ ಜಿಲ್ಲೆಗಳಲ್ಲಿ ನಾವು ಕೇವಲ ರಸ್ತೆ ಮಾರ್ಗದಲ್ಲಿ ತಪಾಸಣೆ ಮಾಡುತ್ತಿದ್ದೆವು. ಇನ್ನು ಮುಂದೆ ರೈಲ್ವೆ ನಿಲ್ದಾಣಗಳಲ್ಲಿಯೂ ಕಟ್ಟುನಿಟ್ಟಿನ ತಪಾಸಣೆ ನಡೆಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಖ್ಯ ಕಾರ್ಯದರ್ಶಿಯವರು ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದರು.
ನಾಳೆ ಬೆಂಗಳೂರಿಗೆ ಹೋದ ನಂತರ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಗಡಿ ಭಾಗದ ಜಿಲ್ಲೆಗಳಲ್ಲಿ ಬಿಗಿಯಾದ ಕ್ರಮ, ಆರೋಗ್ಯ ವ್ಯವಸ್ಥೆಯಲ್ಲಿ ಮೂಲಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವ ಕುರಿತು ಚರ್ಚೆ ನಡೆಸಲಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದು ನನ್ನ ಮೊದಲ ದಿಲ್ಲಿ ಭೇಟಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿ, ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಇದಲ್ಲದೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು, ನಮ್ಮ ರಾಜ್ಯದ ಎಲ್ಲ ಸಂಸದರ ಜೊತೆ ಸಭೆ ನಡೆಸಿ, ಕರ್ನಾಟಕದಲ್ಲಿ ಕೇಂದ್ರ ಸರಕಾರದ ಬಾಕಿ ಇರುವ ವಿಷಯಗಳ ಕುರಿತು ಚರ್ಚೆ ಮಾಡುತ್ತೇನೆ. ಅಲ್ಲದೆ, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚೆ ಮಾಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಧಾನಿ ಹಾಗೂ ಗೃಹ ಸಚಿವರ ಭೇಟಿ ವೇಳೆ ಸಚಿವ ಸಂಪುಟ ರಚನೆ ಕುರಿತು ಚರ್ಚೆ ನಡೆಸಲು ಸಾಧ್ಯವಾಗುವುದಿಲ್ಲ. ಆದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ ವೇಳೆ ಈ ಸಂಬಂಧ ಚರ್ಚಿಸಲಾಗುವುದು. ನಮ್ಮದು ರಾಷ್ಟ್ರೀಯ ಪಕ್ಷ, ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವನ್ನು ಸರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ದೊಡ್ಡ ಸುಳ್ಳಿನ ಕಂತೆ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರಕಾರದ ಎರಡು ವರ್ಷಗಳ ವೈಫಲ್ಯದ ಕುರಿತು ಬಿಡುಗಡೆ ಮಾಡಿರುವ ಹೊತ್ತಿಗೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ನಿನ್ನೆ ರಾತ್ರಿ ಆ ಹೊತ್ತಿಗೆ ನನ್ನ ಕೈ ಸೇರಿದೆ. ಅದನ್ನು ನೋಡಿ ಸೂಕ್ತ ಉತ್ತರ ಕೊಡುತ್ತೇನೆ. ಆದರೆ, ಮೇಲ್ನೊಟಕ್ಕೆ ಕಂಡು ಬರುವಂತೆ ಅದೊಂದು ದೊಡ್ಡ ಸುಳ್ಳಿನ ಕಂತೆ ಎಂದು ತಿರುಗೇಟು ನೀಡಿದರು.