ಒಂದೆರಡು ದಿನಗಳಲ್ಲಿ ಸಚಿವರಿಗೆ ಖಾತೆ ಹಂಚಿಕೆ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು, ಆ. 4: ಇನ್ನು ಒಂದು ಅಥವಾ ಎರಡು ದಿನಗಳಲ್ಲೇ ಎಲ್ಲ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲಿ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆಸಿ ವಿಧಾನಸೌಧದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಕ್ಷಣವೇ ಸಚಿವ ಸಂಪುಟ ರಚನೆ ಮಾಡಲಾಗಿದೆ. ಇದೀಗ ಖಾತೆ ಹಂಚಿಕೆ ಯಾವುದೇ ಕಾರಣಕ್ಕೂ ವಿಳಂಬ ಮಾಡುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಯಾವೊಬ್ಬ ಸಚಿವರು ತನಗೆ ಇದೇ ಖಾತೆ ಬೇಕು. ಅಥವಾ ತಮ್ಮನ್ನು ಹಿಂದಿನ ಖಾತೆಯಲ್ಲೇ ಮುಂದುವರಿಸಿ ಎಂದು ಬೇಡಿಕೆ ಇಟ್ಟಿಲ್ಲ. ಇದೀಗ ಸಚಿವ ಸಂಪುಟ ಸಭೆ ನಡೆಸಿದ್ದು, ಎಲ್ಲ ಸಚಿವರು ತಮ್ಮ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ. ಹೀಗಾಗಿ ಖಾತೆ ಹಂಚಿಕೆಗೆ ಹೈಕಮಾಂಡ್ ಒಪ್ಪಿಗೆ ಅಗತ್ಯವಿಲ್ಲ. ಶೀಘ್ರದಲ್ಲೆ ಖಾತೆ ಹಂಚಿಕೆ ಮಾಡಲಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಶಶಿಕಲಾ ಜೊಲ್ಲೆ ಅವರ ಮೇಲಿನ ಆರೋಪವಷ್ಟೇ ಇದೆ. ಆದರೆ, ಇನ್ನೂ ಅದೇನು ಸಾಬೀತಾಗಿಲ್ಲ. ಈ ಸಂಬಂಧ ಸಂಪುಟ ಸಭೆಯಲ್ಲಿ ಅವರಿಗೆ ವಿವರಣೆ ಕೇಳಿದ್ದೇನೆ. ಹೀಗಾಗಿ ಸರಕಾರದ ಪಾರದರ್ಶಕತೆ ಆಡಳಿತ ನೀಡಲಿದೆ. ಈ ವಿಚಾರದಲ್ಲಿ ಯಾರಿಗೂ ಸಂಶಯಬೇಡ ಎಂದು ಸ್ಪಷ್ಟನೆ ನೀಡಿದ ಅವರು, ಪಕ್ಷ ಸಂಘಟನೆಗೆ ಹಿರಿಯರನ್ನು ಬಳಸಿಕೊಳ್ಳುವ ದೃಷ್ಟಿಯಿಂದ ಕೆಲವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂದರು.
ಪ್ರಾತಿನಿಧ್ಯ ಸಿಗದ ಜಿಲ್ಲೆಗಳಿಗೆ ಇರುವ ಸಚಿವರಿಗೆ ಜಿಲ್ಲೆಗಳನ್ನು ಹಂಚಿಕೆ ಮಾಡಿ ಆ ಜಿಲ್ಲೆಗಳ ಅಭಿವೃದ್ಧಿಗೆ ಆಧ್ಯತೆ ನೀಡಲಾಗುವುದು. ನಮ್ಮದು ರಾಷ್ಟ್ರೀಯ ಪಕ್ಷ ಆಗಿರುವ ಕಾರಣ ವರಿಷ್ಟರ ಜೊತೆ ಸಮಾಲೋಚನೆ ನಡೆಸಬೇಕಾಗುತ್ತದೆ. ಹೀಗಾಗಿ ಅವರೊಂದಿಗೆ ಚರ್ಚಿಸಿ ಸರಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ದಿನಗಳಲ್ಲಿ ಸಂಪುಟ ರಚನೆ ಮಾಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಸಚಿವ ಸ್ಥಾನ ಕೈತಪ್ಪಿದ ಶಾಸಕರಿಂದ ಬಂಡಾಯ ಸಹಜ. ಇರುವ ಎಲ್ಲ ಶಾಸಕರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. 34 ಮಂದಿಗಷ್ಟೇ ಸಂಪುಟದಲ್ಲಿ ಸ್ಥಾನ ನೀಡಲು ಆಗುವುದು. ಈ ಸಂಬಂಧ ಅಸಮಾಧಾನಿತ ಶಾಸಕರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲದೆ, ಪಕ್ಷದ ಮುಖಂಡರು ಮನವೋಲಿಕೆ ಮಾಡಲಿದ್ದಾರೆ ಎಂದ ಅವರು, ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದರು.