ಝಮೀರ್ ಅಹ್ಮದ್ ಅವರಿಂದ ಸುಳ್ಳು ಮಾಹಿತಿ ಆರೋಪ:ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಎನ್.ಆರ್.ರಮೇಶ್ ಆಗ್ರಹ
ಬೆಂಗಳೂರು, ಆ.5: ಕಾಂಗ್ರೆಸ್ ಶಾಸಕ ಝಮೀರ್ ಅಹ್ಮದ್ ಖಾನ್ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ಸಲ್ಲಿಸಿದ್ದು, ಈ ಸಂಬಂಧ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆಗ್ರಹಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿರುವ ಝಮೀರ್ ಅಹ್ಮದ್ ಖಾನ್, ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ನಮೂನೆ 26ರ ಪ್ರಮಾಣ ಪತ್ರದಲ್ಲಿ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ 42 ಲಕ್ಷ ರೂ. ಸಾಲ ಪಡೆದುಕೊಂಡಿರುವುದಾಗಿ ಹೇಳಿದ್ದಾರೆ.
ಆದರೆ, ಇದೇ ಸಾಲಿನಲ್ಲಿ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚೆಲುವರಾಯಸ್ವಾಮಿ ಅವರು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಯಾವುದೇ ರೀತಿಯ ಸಾಲವನ್ನು ಝಮೀರ್ ಅಹ್ಮದ್ಗೆ ನೀಡಿಲ್ಲ ಎಂದಿದ್ದಾರೆ. ಹೀಗಾಗಿ, ಸುಳ್ಳು ಮಾಹಿತಿಯನ್ನು ಆಯೋಗಕ್ಕೆ ಸಲ್ಲಿಸಿರುವುದು ಬಹಿರಂಗವಾಗಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.