ಜನಪ್ರತಿನಿಧಿಗಳ ಮೇಲಿನ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ: ಹೈಕೋರ್ಟ್
ಬೆಂಗಳೂರು, ಆ.11: ಜನಪ್ರತಿನಿಧಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ಬುಧವಾರಮಾಜಿ ಶಾಸಕ, ಹಾಲಿ ಶಾಸಕ ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ಗಳನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಕಳೆದ ವರ್ಷ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಪ್ರಕರಣ ಸೇರಿ ಒಟ್ಟು 61 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ರಾಜ್ಯ ಸರಕಾರ ಆದೇಶ ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಮಂಗಳವಾರ ನೀಡಿರುವ ತೀರ್ಪಿನ ಅನ್ವಯ ಆ ಆದೇಶ ಹಾಲಿ ಹಾಗೂ ಮಾಜಿ ಶಾಸಕ ಅಥವಾ ಸಂಸದರಿಗೆ ಅನ್ವಯವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ನ್ಯಾಯಪೀಠವು ಸ್ಪಷ್ಟಪಡಿಸಿದೆ.
ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ಗಳನ್ನು ಆಯಾ ರಾಜ್ಯದ ಹೈಕೋರ್ಟ್ನ ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂಬ ಮಹತ್ವದ ಆದೇಶವನ್ನು ಸುಪ್ರೀಂಕೋರ್ಟ್ ಹೊರಡಿಸಿತ್ತು.
ಕರ್ನಾಟಕ ಮಾತ್ರವಲ್ಲದೆ ಉತ್ತರ ಪ್ರದೇಶ ಸರಕಾರ ಕೂಡ ಕೆಲವು ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಮೇಲಿನ ಕೇಸನ್ನು ಹಿಂಪಡೆಯಲು ಪ್ರಯತ್ನಿಸಿತ್ತು. ಆದರೆ, ಸುಪ್ರೀಂ ಕೋರ್ಟ್ನ ಆದೇಶದಿಂದ ರಾಜ್ಯ ಸರಕಾರಗಳಿಗೆ ಆ ಅವಕಾಶ ತಪ್ಪಿದಂತಾಗಿದೆ.
ಕರ್ನಾಟಕ ಸರಕಾರ ಕಳೆದ ವರ್ಷ ಆಗ ಕಾನೂನು ಸಚಿವರಾಗಿದ್ದ ಜೆ.ಸಿ. ಮಾಧುಸ್ವಾಮಿ, ಪ್ರವಾಸೋದ್ಯಮ ಸಚಿವರಾಗಿದ್ದ ಸಿ.ಟಿ. ರವಿ, ಕೃಷಿ ಸಚಿವರಾಗಿದ್ದ ಬಿ.ಸಿ.ಪಾಟೀಲ್ ಸೇರಿ ಹಲವು ರಾಜಕಾರಣಿಗಳ ಮೇಲಿನ ಕೇಸ್ಗಳನ್ನು ಹಿಂಪಡೆಯುವಂತೆ ಸೂಚಿಸಿತ್ತು. ಹಾಗೇ, 2017ರಲ್ಲಿ ಶಾಸಕ ಆನಂದ್ ಸಿಂಗ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ಅನ್ನು ಕೂಡ ರದ್ದುಪಡಿಸಲು ಸೂಚಿಸಲಾಗಿತ್ತು. ಆದರೆ, ಇದೀಗ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿಕೆ ನೀಡಿರುವುದರಿಂದ ಕರ್ನಾಟಕದ ಹಲವು ರಾಜಕಾರಣಿಗಳಿಗೆ ಮತ್ತೆ ತಲೆನೋವು ಶುರುವಾಗಿದೆ. ಈ ವಿಚಾರವಾಗಿ ಸೆ.3ಕ್ಕೆ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.