ಇಂದಿರಾ ಅವರ ಪಾದದ ಧೂಳಿಗೂ ಸಿ.ಟಿ.ರವಿ ಸಮರಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ಬೆಂಗಳೂರು: ‘ಸಿ.ಟಿ.ರವಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾದದ ಧೂಳಿಗೂ ಸಮರಲ್ಲ. ಬಿಜೆಪಿಯವರು ಇಂತಹ ಹೇಳಿಕೆ ನೀಡಿ ದೇಶ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಪ್ರಚೋದಿಸುತ್ತಿದ್ದಾರೆ. ಇವರು ರಾಜಕೀಯದಲ್ಲಿರಲು ಲಾಯಕ್ಕಿಲ್ಲ. ಸಿ.ಟಿ.ರವಿ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದು, ಇವರಿಗೆ ಚಂಬಲ್ ಘಾಟ್ ಉಸ್ತುವಾರಿ ನೀಡಬೇಕು. ಅವರನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಗಾರಿದರು.
ಸಿ.ಟಿ.ರವಿ ಅವರ ಇಂದಿರಾ ಗಾಂಧಿ ವಿರುದ್ಧದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,‘ಮೇಕೆದಾಟು ಯೋಜನೆ ರಾಜ್ಯದ ಹಕ್ಕು. ಈಗಾಗಲೇ ಸುಪ್ರೀಂ ಕೋರ್ಟ್, ನ್ಯಾಯಾಧಿಕರಣ ತೀರ್ಪು ನೀಡಿದ್ದು, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದೆ. ಆದರೂ ರಾಜ್ಯದ ಹಕ್ಕನ್ನು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ತಮಿಳುನಾಡಿಗೆ ಹೆದರಿ ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ಸಿ.ಟಿ.ರವಿ ತಮಿಳುನಾಡಿನ ಪರವಾಗಿ ವಕಾಲತ್ತು ವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಚಿಕ್ಕಮಗಳೂರು ಜನ ರವಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ' ಎಂದು ಅವರು ಹೇಳಿದರು.
'ತಮಿಳುನಾಡಿನ ಉಸ್ತುವಾರಿ ಆಗಿರುವ ಕಾರಣ ರವಿ ತಮಿಳುನಾಡಿನ ಪರ ವಕಾಲತ್ತು ವಹಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವರಿಗೆ ಛೀಮಾರಿ ಹಾಕಲಾಗಿದೆ. ಇಷ್ಟಾದರೂ ಅವರಿಗೆ ಮಾನ ಮರ್ಯಾದೆ ಇಲ್ಲ. ಅದಕ್ಕಾಗಿ ತಮಿಳುನಾಡಿನ ಪರ ಮಾತನಾಡುತ್ತಿದ್ದಾರೆ. ಅವರು ಬೇಕಾದರೆ ತಮಿಳುನಾಡಿನಲ್ಲಿ ಹೋಗಿ ವಾಸ ಮಾಡಲಿ. ನಿತ್ಯ ಹುಕ್ಕಾ ಬಾರ್ ಮಾಡುವವರು, ಹಾಡಹಗಲೇ ದರೋಡೆ ಮಾಡುವವರಿಗೆ ಅಂತಹದ್ದೇ ಆಲೋಚನೆ ಬರುತ್ತದೆ. ಇದನ್ನು ನಾನು ಖಂಡಿಸುತ್ತೇನೆ. ಇಂದಿರಾಗಾಂಧಿ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ’ ಎಂದು ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.