ಅತ್ಯಾಚಾರಿಗಳ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಲು ಕಾನೂನಿಗೆ ತಿದ್ದುಪಡಿ ಅಗತ್ಯ: ಸಚಿವ ಈಶ್ವರಪ್ಪ
ಶಿವಮೊಗ್ಗ, ಆ.28: ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವಂತಹ ಕಾನೂನು ಜಾರಿಗೆ ತರಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
'ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರಿಗಳ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಲು ಕಾನೂನಿಗೆ ತಿದ್ದುಪಡಿ ಆಗಬೇಕಾಗಿದೆ' ಎಂದರು.
'ವಿಧಾನ ಪರಿಷತ್ ನಲ್ಲಿ ನಾನು ವಿಪಕ್ಷ ನಾಯಕನಾಗಿದ್ದಾಗ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿತ್ತು. ಈ ಬಗ್ಗೆ ನಾನು ಸದನದಲ್ಲಿ ಅಂದಿನ ಗೃಹ ಸಚಿವ ಜಾರ್ಜ್ ಅವರಿಗೆ ವಿಶೇಷ ಕಾನೂನು ರಚಿಸಬೇಕು. ಕಾನೂನಿಗೆ ತಿದ್ದುಪಡಿ ತರುವಂತೆ ಒತ್ತಾಯಿಸಿದ್ದೆ. ಆದರೆ, ಅದು ಇದುವರೆಗೂ ಆಗಲಿಲ್ಲ. ನಮ್ಮ ಸರ್ಕಾರ ಶೀಘ್ರದಲ್ಲೇ ವಿಶೇಷ ಕಾನೂನು ರಚಿಸಿ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದರು.
'ಅತ್ಯಾಚಾರದಂತಹ ಕೃತ್ಯವೆಸಗುವ ನೀಚರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದರು.
Next Story