15 ದಿನದೊಳಗೆ ಜಾಗತಿಕ ಹೂಡಿದಾರರ ಸಮಾವೇಶಕ್ಕೆ ದಿನಾಂಕ ನಿಗದಿ: ಸಚಿವ ಮುರುಗೇಶ್ ನಿರಾಣಿ
ತುಮಕೂರು, ಸೆ.2: ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ‘ಉದ್ಯೋಗ ಕ್ರಾಂತಿ’ಗೆ ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ 15 ದಿನದೊಳಗೆ ದಿನಾಂಕ ನಿಗಧಿಪಡಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಗುರುವಾರ ತುಮಕೂರಿನ ವಸಂತನರಸಪುರದ ಕೈಗಾರಿಕಾ ಪ್ರದೇಶದಲ್ಲಿರುವ ಫುಡ್ ಪಾರ್ಕ್ಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಗುವುದು. 15 ದಿನದೊಳಗೆ 2022ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿ ಮಾಡುವುದಾಗಿ ಹೇಳಿದರು.
ದೇಶ-ವಿದೇಶಗೆಳಿಂದ ಕೈಗಾರಿಕೆ ಸ್ಥಾಪನೆ ಮಾಡಲು ಉದ್ಯಮಿಗಳಿಗೆ ಅಹ್ವಾನ ಮಾಡುವ ಮೂಲಕ 2022 ರಲ್ಲಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗುವುದು. ಕಳೆದ ಬಾರಿಯಂತೆ ಈ ಬಾರಿಯೂ ಹೂಡಿಕೆದಾರರ ಸಮಾವೇಶವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು. ಈ ಬಾರಿ ಹೊಸದಾಗಿ 5 ಲಕ್ಷ ಉದ್ಯೋಗಗಳನ್ನು ನೀಡುವ ಗುರಿ ಇದೆ ಎಂದು ಮುರುಗೇಶ್ ನಿರಾಣಿ ತಿಳಿಸಿದರು.
2011-2012ರಲ್ಲಿ ಬೃಹತ್ ಕೈಗಾರಿಕಾ ಆಂದೋಲನ ನಡೆಸಿ ವಿವಿಧ ದೇಶಗಳಿಂದ ಉದ್ಯಮಿಗಳಿಗೆ ಅಹ್ವಾನ ನೀಡಿದ್ದೇವು. ಆಗಾ ಸಾವಿರಾರು ಉದ್ಯೋಗಿಗಳಿಗೆ ಕೆಲಸ ಸಿಕ್ಕಿದೆ. ಈ ಬಾರಿಯೂ ‘ಉದ್ಯೋಗ ಸೃಷ್ಟಿಗೆ’ ಮೊದಲ ಆದ್ಯತೆ ನೀಡಲಾಗುವುದು. ಇಲ್ಲಿನ ಫುಡ್ ಪಾರ್ಕ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಕೆಲಸವನ್ನು ಮಾಡುತ್ತಿದ್ದಾರೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.
ಸುಮಾರು 105 ಎಕರೆ ಪ್ರದೇಶದಲ್ಲಿ ಫುಡ್ ಪಾರ್ಕ್ ಕೈಗಾರಿಕಾ ವಿಸ್ತರಣೆ ಹೊಂದಿದೆ 1000 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿದೆ. ದೇಶ-ವಿದೇಶಗಳಿಂದ ಅನೇಕ ಕಂಪನಿಗಳು ಬಂದಿವೆ. ಮುಂದಿನ ದಿನಗಳಲ್ಲಿ ಇದರಿಂದ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಲಾಭವಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಫುಡ್ ಪಾರ್ಕ್ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ನಿರಾಣಿ, ಡಾ.ಸರೋಜಿನಿ ಮಹಿಷಿ ಅವರ ವರದಿಯ ಪ್ರಕಾರ ಸ್ಥಳೀಯರಿಗೆ ಶೇ.80ರಷ್ಟು ಉದ್ಯೋಗಗಳನ್ನು ನೀಡಬೇಕು. ಒಂದು ವೇಳೆ ಯಾವುದಾದರೂ ಲೋಪದೋಷಗಳು ಉಂಟಾಗಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುವುದು. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ನೀಡಬೇಕು ಎಂಬ ನಿಲುವಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಸ್ಪಷ್ಟನೆ ನೀಡಿದರು.
ಈ ಸಂದರ್ಭದಲ್ಲಿ ವಿಶೇಷ ಜಿಲ್ಲಾಧಿಕಾರಿ ಡಾ.ಶಿವರಾಂ.ಬಂಡಾರಿ, ಕೆಐಡಿಬಿಯ ಸಿಇಒ ಎನ್. ಶಿವಶಂಕರ್, ಮುಖ್ಯ ಅಭಿವೃದ್ಧಿ ಅಧಿಕಾರಿ ಬಿ.ಕೆ.ಪವಿತ್ರ, ಹಿರಿಯ ಅಧಿಕಾರಿ ತಬಸ್ಸುಮ್ ಝಾಹೆರಾ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.