ವಿದ್ಯುತ್ ಬಿಲ್ನಲ್ಲಿ ಅಕ್ರಮ: ಮೂವರ ಅಮಾನತು; ಇಂಧನ ಸಚಿವ ಸುನೀಲ್ ಕುಮಾರ್
ಇಂಧನ ಸಚಿವ ಸುನೀಲ್ ಕುಮಾರ್
ಬೆಂಗಳೂರು, ಸೆ. 4: `ವಿದ್ಯುತ್ ಬಿಲ್ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ' ಎಂದು ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, `ಕೋಲಾರ ಜಿಲ್ಲೆಯ ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ ಹಾಗೂ ಕಿರಿಯ ಸಹಾಯಕಿ ಸುಜಾತಮ್ಮ. ಮೂವರು ಅಮಾನತುಗೊಂಡಿರುವ ಸಿಬ್ಬಂದಿಯಾಗಿದ್ದಾರೆ. ಇವರು ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು' ಎಂದು ಸುನೀಲ್ ಕುಮಾರ್ ಎಚ್ಚರಿಸಿದ್ದಾರೆ.
ಪ್ರಸ್ತುತ ಈ ಮೂವರು ಸಿಬ್ಬಂದಿ ಬೇರೆ, ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢವಾಗಿರುವುದರಿಂದ ಹಾಗೂ 8 ಆರ್ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ಕಂಪೆನಿಗೆ ನಷ್ಟವಾಗಿರುವುದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ, ಜೊತೆಗೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆಯನ್ನು ದಾಖಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.