ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ನೇತೃತ್ವ: ಅಮಿತ್ ಶಾ ಹೇಳಿಕೆಗೆ ಬದ್ಧ ಎಂದ ಸಚಿವ ಭೈರತಿ ಬಸವರಾಜ್
ದಾವಣಗೆರೆ : ಮುಂಬರುವ ಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಬದ್ದವಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕ ಯಡಿಯೂರಪ್ಪನವರು ರಾಜ್ಯ ಸುತ್ತಿ ಪಕ್ಷ ಕಟ್ಟಿದ್ದಾರೆ. ಅಮಿತ್ ಶಾ ಕೂಡ ಯಡಿಯೂರಪ್ಪ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದಾರೆ. ರಾಜ್ಯ ಪ್ರವಾಸ ಮಾಡುವುದರಲ್ಲಿ ತಪ್ಪೇನಿಲ್ಲ. ಯಡಿಯೂರಪ್ಪನವರ ಪ್ರವಾಸದ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಯಡಿಯೂರಪ್ಪ ಅಥವಾ ಜಗದೀಶ ಶೆಟ್ಟರ್ ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆಯಿಂದ ಸಂಜೆವರೆಗೆ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಈ ಬಗ್ಗೆ ನೀಡಿದ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ. ರಾಜ್ಯದ ಅಭಿವೃದ್ಧಿ ಚಿಂತನೆ ಮಾತ್ರ ನಮ್ಮ ಗುರಿಯಾಗಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟವಾಗಿದೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ದಿಟ್ಟ ನಿರ್ಧಾರ ಕೈಗೊಳ್ಳುತ್ತೇವೆ. ಮುಖ್ಯಮಂತ್ರಿಗಳು ಈ ಕುರಿತು ಕಾನೂನಾತ್ಮವಾಗಿ ಪರಿಹಾರ ಕಂಡುಕೊಳ್ಳಲಿದ್ದಾರೆ ಎಂದು ತಿಳಿಸಿದರು.