ಕೊಡಗು: ಸೆ.17 ರಿಂದ ಶಾಲಾ-ಕಾಲೇಜು ಆರಂಭಕ್ಕೆ ಜಿಲ್ಲಾಧಿಕಾರಿ ಆದೇಶ
ಜಿಲ್ಲಾಧಿಕಾರಿ ಚಾರುಲತಾ ಸೋಮಲ್
ಮಡಿಕೇರಿ ಸೆ.14 : ಪ್ರಸ್ತುತ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.2 ಕ್ಕಿಂತ ಕಡಿಮೆ ಇದೆ. ಈ ಹಿನ್ನೆಲೆ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ, ತಾಂತ್ರಿಕ, ಡಿಪ್ಲೊಮಾ ಕಾಲೇಜುಗಳ ಸ್ನಾತಕೋತ್ತರ ತರಗತಿಗಳನ್ನು, ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳಲ್ಲಿನ 9 ಮತ್ತು 10 ನೇ ತರಗತಿಗಳು ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಸೆ.17 ರಿಂದ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಹಿಂದುಳಿದ, ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳ ಹಾಸ್ಟೆಲ್ಗಳ ಅಧಿಕಾರಿ, ಸಿಬ್ಬಂದಿಗಳು ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರತಕ್ಕದ್ದು.
ಶಾಲಾ ಕಾಲೇಜು, ವಿದ್ಯಾಸಂಸ್ಥೆ ಮತ್ತು ಹಾಸ್ಟೆಲ್ಗಳನ್ನು ನಿಯಮಾನುಸಾರ ಸ್ಯಾನಿಟೈಸ್ ಮಾಡುವುದು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರಬೇಕು. ಪದವಿ ಮತ್ತು ಅದಕ್ಕೆ ಮೇಲ್ಪಟ್ಟ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರತಕ್ಕದ್ದು. ವಿದ್ಯಾರ್ಥಿಗಳ ಪಾಲಕರು ಕೋವಿಡ್-19 ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳುವುದು. ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ, ವಿದ್ಯಾರ್ಥಿ ನಿಲಯದಲ್ಲಿ ಒಂದು ಕೊಠಡಿಯನ್ನು ಐಸೋಲೋಷನ್ ಕೊಠಡಿ ಆಗಿ ಕಾಯ್ದಿರಿಸುವುದು. ಶಾಲಾ ಕಾಲೇಜು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಮಾಣಿತ ಕಾರ್ಯಾಚರಣೆ ವಿಧಾನದಂತೆ ನಿಯಮಾನುಸಾರ ಸೂಕ್ತ ಕೆಎಸ್ಆರ್ಟಿಸಿ., ಖಾಸಗಿ ಸಾರಿಗೆ ವ್ಯವಸ್ಥೆ ಬಗ್ಗೆ ಕ್ರಮವಹಿಸುವುದು.
ಈ ಆದೇಶವು ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನೀಡುವ ನಿರ್ದೇಶನಗಳಿಗೆ ಒಳಪಟ್ಟಿರುತ್ತದೆ. ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಬದಲಾವಣೆಗಳನ್ನು ಜಿಲ್ಲಾಡಳಿತವು ಮುಂದಿನ ದಿನಗಳಲ್ಲಿ ನೀಡಲಿದೆ. ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಶಾಲಾ, ಕಾಲೇಜು ಆರಂಭಿಸಿದರೆ ಸಾಲದು, ಬಸ್ ವ್ಯವಸ್ಥೆ ಕೂಡ ಬೇಕು
ಶಾಲಾ, ಕಾಲೇಜು ಅರಂಭಕ್ಕೂ ಮೊದಲು ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸೇವೆಗೆ ಮತ್ತೆ ಚಾಲನೆ ನೀಡಬೇಕೆಂದು ನಿಟ್ಟೂರು ಗ್ರಾ.ಪಂ ಪ್ರತಿನಿಧಿಗಳು ಆಗ್ರಹಿಸಿದ್ದಾರೆ.
ಕಾರ್ಮಾಡು, ನಿಟ್ಟೂರು, ಬಾಳೆಲೆ ಪೊನ್ನಪ್ಪಸಂತೆ, ಕಿರುಗೂರು, ಮಾಯಮುಡಿ ಸೇರಿದಂತೆ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆಯ ಬಸ್ ಗಳನ್ನೇ ನಂಬಿಕೊಂಡಿದ್ದಾರೆ. ಈ ಹಿಂದೆ ಬೆಳಗ್ಗೆ ಮತ್ತು ಸಂಜೆ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಗಳನ್ನು ಕೋವಿಡ್ ಸಂದಿಗ್ಧ ಪರಿಸ್ಥಿತಿ ಮತ್ತು ಆದಾಯ ಇಲ್ಲದ ಕಾರಣಕ್ಕಾಗಿ ಸ್ಥಗಿತಗೊಳಿಸಲಾಗಿತ್ತು.
ಆದರೆ ಇದೀಗ ಜಿಲ್ಲಾಡಳಿತ ದಿಢೀರ್ ಆಗಿ ಸೆ.17 ರಿಂದಲೇ ಶಾಲಾ, ಕಾಲೇಜುಗಳನ್ನು ಆರಂಭಿಸುವ ಕುರಿತು ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರೆದಿದ್ದು, ದೂರದ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಅಲ್ಲದೆ ಬಸ್ ವ್ಯವಸ್ಥೆ ಕಲ್ಪಿಸದೆ ಇದ್ದಲ್ಲಿ ವಿದ್ಯಾರ್ಥಿಗಳು ಮತ್ತೆ ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆಗಳಿದೆ. ಆದ್ದರಿಂದ ಪ್ರತಿನಿತ್ಯ ಸಂಚರಿಸುವಂತೆ ಅಗತ್ಯ ಬಸ್ ವ್ಯವಸ್ಥೆಯನ್ನು ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಕ್ಕೇರ ಅಯ್ಯಪ್ಪ, ಉಪಾಧ್ಯಕ್ಷೆ ಕವಿತ, ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ, ಅಮ್ಮುಣಿ ಮತ್ತಿತರರು ಅಗ್ರಹಿಸಿದ್ದಾರೆ.