`ಸ್ವರ್ಣ ನದಿ' ನೀರು ಸದ್ಬಳಕೆಗೆ ಕ್ರಮ: ಸಚಿವ ಗೋವಿಂದ ಕಾರಜೋಳ
ಬೆಂಗಳೂರು, ಸೆ. 14: `ಉಡುಪಿ ಜಿಲ್ಲೆಯ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹರಿಯುವ `ಸ್ವರ್ಣ ನದಿ'ಯ ನೀರನ್ನು ಸದುಪಯೋಗಪಡಿಸಿಕೊಳ್ಳಲು 165 ಕೋಟಿ ರೂಪಾಯಿಗಳ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದ್ದು ಮುಂದಿನ ಆರ್ಥಿಕ ವರ್ಷದಲ್ಲಿ ಯೋಜನೆಯನ್ನು ಕೈಗೆತ್ತಿಗೊಳ್ಳಲು ಉದ್ದೇಶಿಸಲಾಗಿದೆ' ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ರಘುಪತಿ ಭಟ್ ಅವರ ಪರವಾಗಿ ಸಂಜೀವ್ ಮಠಂದೂರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಸ್ವರ್ಣ ನದಿ ನೀರನ್ನು ಸದುಪಯೋಗಪಡಿಸಿಕೊಳ್ಳುವ ಹಾಗೂ ಅಂತರ್ಜಲ ಮಟ್ಟವನ್ನು ವೃದ್ಧಿಸುವ ಉದ್ದೇಶದಿಂದ ಸಿಹಿ ಮತ್ತು ಉಪ್ಪು ನೀರು ತಡೆಗೋಡೆ(ಬ್ಯಾರೇಜ್) ನಿರ್ಮಾಣವನ್ನು ಸ್ವರ್ಣ ಏತನೀರಾವರಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸದರಿ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ಪರಿಶೀಲಿಸಿ ಈಗಾಗಲೇ ಅನುಮೋದಿತ, ಮುಂದುವರಿದ/ಚಾಲ್ತಿಯಲ್ಲಿರುವ ಕಾಮಗಾರಿಗಳ ಬಾಕಿ ಬಿಲ್ಲುಗಳಿಗೆ ಆದ್ಯತೆ ಮೇಲೆ ಅನುದಾನ ಒದಗಿಸಬೇಕಾಗಿದೆ. ಹೀಗಾಗಿ ಹಣಕಾಸಿನ ಲಭ್ಯ ಕೊರತೆ ಹಿನ್ನೆಲೆಯಲ್ಲಿ ಮುಂದಿನ ಆಯವ್ಯಯದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು.