ಸಿದ್ದರಾಮಯ್ಯ ಸೇರಿದಂತೆ ಯಾರಿಂದಲೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ: ಎಚ್.ಡಿ ದೇವೇಗೌಡ
ಫೈಲ್ ಚಿತ್ರ
ಬೆಂಗಳೂರು, ಸೆ.27: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ನಲ್ಲಿ ಸೋಮವಾರ ಆರಂಭವಾದ 4 ದಿನಗಳ ‘ಜನತಾ ಪರ್ವ 1.0' ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರು ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ ಎಂದು ಅವರು ಹೇಳಿದರು.
ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ. ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023ರಲ್ಲಿ ಉತ್ತರ ನೀಡೋಣ ಎಂದು ದೇವೇಗೌಡ ಕರೆ ನೀಡಿದರು.
ಹೈಟೆಕ್ ಕಾರ್ಯಾಗಾರ, ಹೊಸತನಕ್ಕೆ ಮುನ್ನುಡಿ: ‘ಇರುವುದು ಒಂದೇ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ’ ಎನ್ನುವ ಘೋಷವಾಕ್ಯ ಹಾಗೂ 2023ಕ್ಕೇ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷ.
ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಮಿಷನ್ 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಅವರು ಗುಡುಗಿದರು.
ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇದೇ ವೇಳೆ ಮಾಜಿ ಶಾಸಕ ವೈಎಸ್ವಿ ದತ್ತ ‘ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ' ಎಂಬ ವಿಷಯದ ಬಗ್ಗೆ ಮಾತನಾಡಿದರು.
ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.