ಬೆಂಗಳೂರು ಉಸ್ತುವಾರಿ ವಿಚಾರ: ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಸಚಿವ ಆರ್. ಅಶೋಕ್
ಬೆಂಗಳೂರು: ಬೆಂಗಳೂರು ನಗರ ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವ ವಿ.ಸೋಮಣ್ಣ ನೀಡಿರುವ ಹೇಳಿಕೆಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡುವುದು ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟಿದ್ದು. ಅವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಇಂತಹ ಜಿಲ್ಲೆಯ ಉಸ್ತುವಾರಿಯೇ ಬೇಕು ಎಂದು ನಾನು ಈವರೆಗೆ ಮುಖ್ಯಮಂತ್ರಿ ಸೇರಿದಂತೆ ಯಾವ ಮುಖಂಡರ ಬಳಿಯೂ ಕೇಳಿಲ್ಲ. ಈ ಹಿಂದೆ ನನಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಎಂ.ಟಿ.ಬಿ.ನಾಗರಾಜ್ ಕೋರಿಕೆ ಹಿನ್ನೆಲೆಯಲ್ಲಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವನಾಗದೆ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ ಉಸ್ತುವಾರಿಯನ್ನು ಯಾರಿಗೆ ಕೊಟ್ಟರೂ ನಾನು ಅವರ ಜೊತೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಅಶೋಕ್ ಹೇಳಿದರು.