ಬಿಜೆಪಿಯಲ್ಲಿ ಮಾತ್ರ ನಿಜವಾದ ಪ್ರಜಾಪ್ರಭುತ್ವ ಇದೆ: ಸಚಿವ ನಾರಾಯಣಗೌಡ
ಕೊಪ್ಪಳ, ಅ.29: ‘ಬಿಜೆಪಿ ಪಕ್ಷದಲ್ಲಿ ಮಾತ್ರ ನಿಜವಾದ ಪ್ರಜಾಪ್ರಭುತ್ವ ಇದೆ. ಉಳಿದ ಪಕ್ಷದಲ್ಲಿ ಇದನ್ನು ನಿರೀಕ್ಷಿಸಲೂ ಸಾಧ್ಯವಿಲ್ಲ' ಎಂದು ರೇಷ್ಮೆ, ಯುವ ಸಬಲಿಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ನಾರಾಯಣ ಗೌಡ ತಿಳಿಸಿದ್ದಾರೆ.
ಶುಕ್ರವಾರ ಕೊಪ್ಪಳ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಜಿಲ್ಲಾ ಬಿಜೆಪಿ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿರುವುದು ಖುಷಿ ತಂದಿದೆ. ಸಚಿವ ಹಾಲಪ್ಪ ಆಚಾರ್ ಅವರೊಂದಿಗೆ ಸರಕಾರಕ್ಕೆ ಉತ್ತಮ ಹೆಸರು ತರುವ ಕೆಲಸ ಮಾಡಲಾಗುತ್ತಿದೆ' ಎಂದರು.
‘ರಾಜ್ಯದ ಪ್ರತಿ ಜಿಲ್ಲೆಗೂ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದೇನೆ. ರೇಷ್ಮೆ ಇಲಾಖೆ ಹಾಗೂ ಕ್ರೀಡಾ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇನೆ ಎಂದ ಅವರು, ಇದೇ ವೇಳೆ ಬಿಜೆಪಿ ಪಕ್ಷಕ್ಕೆ ಬಂದಿದ್ದು ನನ್ನ ಅದೃಷ್ಟ. ಪಕ್ಷದ ನೀತಿ, ನಿಯಮವೂ ಎಲ್ಲವೂ ಉತ್ತಮವಾಗಿದೆ. ಇಷ್ಟೊಂದು ಪ್ರೀತಿ-ವಿಶ್ವಾಸ ತೋರಿಸಿದ್ದಕ್ಕೆ ಧನ್ಯವಾದಗಳು' ಎಂದು ನಾರಾಯಣಗೌಡ ಹೇಳಿದರು.
ಸಂಸದ ಕರಡಿ ಸಂಗಣ್ಣ ಮಾತನಾಡಿ, ‘ನಾರಾಯಣಗೌಡ ಅವರು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದಾರೆ. ಕ್ರೀಡೆಯಲ್ಲಿ ಮೋದಿಯವರ ಕನಸನ್ನು ಸಾಕಾರಗೊಳಿಸಲು ಅವರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಮೋದಿಯವರ ಆಶಯದಂತೆ ನಾರಾಯಣಗೌಡ ಒಂದು ಉತ್ತಮ ಕನಸು ಹೊಂದಿದ್ದಾರೆ. ಅದಕ್ಕೆ ಖೇಲೋ ಇಂಡಿಯಾ ಆಯೋಜಿಸುತ್ತಿರುವುದೇ ಸಾಕ್ಷಿ. ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಮೀಸಲಾತಿ ಜಾರಿಗೆ ತರುತ್ತಿದ್ದಾರೆ. ಕ್ರೀಡಾ ಇಲಾಖೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಉತ್ತೇಜನ ನೀಡುತ್ತಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಕೆಎಸ್ಎಂಬಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.