ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳಿದ್ದರೆ ಬಂಧಿಸಲು ತಡವೇಕೆ?: ಡಿ.ಕೆ.ಶಿವಕುಮಾರ್ ಪ್ರಶ್ನೆ
ಬೆಂಗಳೂರು, ನ. 11: `ಹಳೇ ಪ್ರಕರಣವನ್ನು ಇಟ್ಟುಕೊಂಡು ಕಾಂಗ್ರೆಸ್ ನಾಯಕರ ಘನತೆ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈ ರೀತಿ ಕಾಂಗ್ರೆಸ್ ನಾಯಕರ ಘನತೆಗೆ ಧಕ್ಕೆ ತರಲು ಸಾಧ್ಯವಿಲ್ಲ. ನಮ್ಮ ಬಳಿಯೂ ಕೆಲವು ಮಾಹಿತಿಗಳಿವೆ, ಸೂಕ್ತ ಸಮಯದಲ್ಲಿ ನಾವು ಮಾತನಾಡುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಬಿಟ್ ಕಾಯಿನ್ ಪ್ರಕರಣ ಇಡೀ ಹಗರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಪ್ರಕರಣದ ವಿಚಾರಣೆಯನ್ನು ಇಡಿಗೆ ಹಸ್ತಾಂತರ ಮಾಡಲಾಗಿದೆ ಎಂಬುದು ಸಿಎಂ ಹೇಳಿಕೆ. ಈಗ ಅವರು ಕೆಲವು ಕಾಂಗ್ರೆಸ್ ನಾಯಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಿದ್ದಾರೆ. ಹಳೇ ಪ್ರಕರಣವನ್ನು ಉಲ್ಲೇಖಿಸಿ ದಾರಿ ತಪ್ಪಿಸುತ್ತಿದ್ದಾರೆ. ಹಲವು ವದಂತಿಗಳನ್ನು ಹರಿಯಬಿಡಲಾಗಿದೆ' ಎಂದು ದೂರಿದರು.
ಪ್ರಧಾನಿಗೆ ಜನಸಾಮಾನ್ಯ ಬರೆದ ದೂರಿನ ಪತ್ರವನ್ನು ಓದಿದ್ದೇನೆ. ಅದರಲ್ಲಿ ಅನೇಕ ಬಿಜೆಪಿ ನಾಯಕರ ಹೆಸರುಗಳಿವೆ. ಅದು ನಿಜವೇ? ಅವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ, ಇಲ್ಲವೇ? ಅವರ ಹೆಸರುಗಳನ್ನು ಬಹಿರಂಗ ಪಡಿಸಲಿ. ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಸಿಎಂ ಹೇಳುತ್ತಾರೆ. ಪೊಲೀಸ್ ಅಧಿಕಾರಿಗಳು ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿರುವಾಗ, ಈ ವಿಚಾರವನ್ನು ಜನರ ಮುಂದೆ ಇಡುವುದು ಸರಕಾರದ ಜವಾಬ್ದಾರಿ ಎಂದು ಶಿವಕುಮಾರ್ ಸಲಹೆ ನೀಡಿದರು.
ಸಿಎಂ ಅವರು ತಮ್ಮ ನಾಯಕರ ಹೆಸರು ಮುಚ್ಚಿಟ್ಟು, ಕಾಂಗ್ರೆಸ್ ನಾಯಕರ ಹೆಸರು ತಳುಕು ಹಾಕಲು ಪ್ರಯತ್ನಿಸುತ್ತಿದ್ದಾರೆ. ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಅದೇ ರೀತಿ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ಹೆಸರೂ ಹೊರಬರಬೇಕು. ಬಿಜೆಪಿ ನಾಯಕರು, ಮಂತ್ರಿಗಳೇ ಈ ವಿಚಾರವಾಗಿ ಮಾಧ್ಯಮಗಳು ಹಾಗೂ ಕಾಂಗ್ರೆಸ್ ನಾಯಕರಿಗೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರು, ಅವರ ಮಕ್ಕಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬಿಜೆಪಿಯಲ್ಲಿ ಭಿನ್ನಮತ, ಆಂತರಿಕ ಜಗಳ ಸಾಮಾನ್ಯ. ಹೀಗಾಗಿ ನಮಗೆ ಕೇಳಿ ಬಂದಿರುವ ಬಿಜೆಪಿ ನಾಯಕರ ಹೆಸರುಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ತನಿಖೆ ಸರಿಯಾದ ಮಾರ್ಗದಲ್ಲಿ ನಡೆದು ನಮಗೆ ಸತ್ಯಾಂಶ ಹೊರಬರಬೇಕಿದೆ. ಆದರೆ ಬಿಜೆಪಿ ಈ ಪ್ರಕರಣದಲ್ಲಿ ತನ್ನ ನಾಯಕರನ್ನು ರಕ್ಷಿಸಿ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಹೊರಿಸುವ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಶಿವಕುಮಾರ್ ಆರೋಪಿಸಿದರು.
ಬಂಧಿಸಲು ತಡವೇಕೆ?: `ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ' ಎಂಬ ವದಂತಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದರೆ, ಅವರನ್ನು ಬಂಧಿಸಲು ತಡ ಮಾಡುತ್ತಿರುವುದೇಕೆ? ಕೂಡಲೇ ಬಂಧಿಸಲಿ. ಸಮಯ ವ್ಯರ್ಥ ಮಾಡುವುದೇಕೆ? ಅವರು ಯಾವ ರೀತಿ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಿ. ಆರೋಪಿ ಸ್ನೇಹಿತನಾಗಿದ್ದ ಮಾತ್ರಕ್ಕೆ ಪ್ರಕರಣದಲ್ಲಿ ಸಿಲುಕಿಸಲು ಸಾಧ್ಯವಿಲ್ಲ. ಇದು ಬೆಂಗಳೂರು, ಕರ್ನಾಟಕ ರಾಜ್ಯದ ಘನತೆಯ ವಿಚಾರ. ಹೀಗಾಗಿ ಈ ಪ್ರಕರಣದ ಸತ್ಯಾಂಶ ಹೊರಬರಬೇಕಿದೆ' ಎಂದು ಆಗ್ರಹಿಸಿದರು.
ಈ ಪ್ರಕರಣದ ಹಾದಿ ತಪ್ಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, `ಹಣ್ಣು ತಿಂದವರು ಯಾರೋ, ಸಿಪ್ಪೆ ತಿಂದವರು ಯಾರೋ, ಮೂತಿಗೆ ಒರೆಸಿದವರು ಯಾರೋ, ಎಲ್ಲವೂ ಮುಂದೆ ಗೊತ್ತಾಗುತ್ತದೆ. ಸಿಎಂ ದಿಲ್ಲಿ ಪ್ರವಾಸ ಏಕೆ ಹೋದರೊ, ಏನು ಗುಸುಗುಸು ನಡೆಯುತ್ತಿದೆಯೋ, ಅವರ ಪಕ್ಷದ ನಾಯಕರೇ ಕರೆ ಮಾಡಿ, ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ಆ ವಿಚಾರ ಮಾತನಾಡುವುದು ಬೇಡ' ಎಂದು ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳಬೇಡಿ ಎಂದು ಪ್ರಧಾನಿ ಧೈರ್ಯ ತುಂಬಿದ್ದಾರೆಂಬ ಬೊಮ್ಮಾಯಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಬಹಳ ಸಂತೋಷ. ಆ ಪ್ರಕರಣದ ವಿಚಾರವನ್ನು ಜನರ ಮುಂದೆ ಬಿಚ್ಚಿಡಲಿ. ಈ ವಿಚಾರವನ್ನು ಪ್ರಧಾನಿ ಮುಂದೆ ಇವರು ಪ್ರಸ್ತಾಪ ಮಾಡಿದ್ದೇಕೆ? ಅವರು ಯಾಕೆ ತಲೆಕೆಡಿಸಿಕೊಳ್ಳಬೇಡಿ ಎಂದರು. ಯಾರಿಗಾದರೂ ತೊಂದರೆ, ಲಾಸ್ ಆಗಿದೆಯಾ? ಹೊರ ರಾಷ್ಟ್ರಗಳ ಹಣ ಹೋಗಿದೆಯಾ? ಅವರ ಹಸ್ತಕ್ಷೇಪ ಇದೆಯಾ? ಪ್ರಕರಣ ಹೇಗೆ ನಡೆದಿದೆ? ಏಕೆ ಬಂಧಿಸಿ ವಿಚಾರಣೆ ಮಾಡಿದರು? ಬಿಟ್ ಕಾಯಿನ್ ವಿಚಾರದಲ್ಲೇ ಯಾಕೆ ಎಫ್ಐಆರ್ ದಾಖಲಿಸಿದರು? ಎಲ್ಲ ಮಾಹಿತಿ ನೀಡಿ ಸ್ಪಷ್ಟತೆ ನೀಡಲಿ. ಕೆಲವು ಮಾಹಿತಿಗಳನ್ನು ಮಾತ್ರ ಮಾಧ್ಯಮಗಳಿಗೆ ಬಿಡುಗಡೆ ಮಾಡುವುದೇಕೆ? ಎಂದರು.
ಆನಂದ್ ಮಾಮನಿ ಅವರು ಪ್ರಧಾನಿ ಅವರಿಗೆ ಬರೆದ ಪತ್ರದಲ್ಲಿ ಬಿಜೆಪಿ ನಾಯಕರ ಹೆಸರಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಆ ಪತ್ರದಲ್ಲಿರುವ ಹೆಸರುಗಳ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡುತ್ತಿಲ್ಲ? ಅದು ಸತ್ಯವೋ? ಸುಳ್ಳೋ ಎಂದು ನಾನು ಹೇಳುವುದಿಲ್ಲ. ಇದೆಲ್ಲವೂ ತನಿಖೆಯಾಗಬೇಕಲ್ಲವೇ? ಬಿಜೆಪಿಯವರು ಬಾಯಿ ಚಪಲಕ್ಕಾಗಿಯೇ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ. ಮಾಧ್ಯಮಗಳ ಮೂಲಕ ಕಾಂಗ್ರೆಸ್ ನಾಯಕರ ಹೆಸರು ಹರಿಬಿಡುತ್ತಿದ್ದಾರೆ' ಎಂದು ದೂರಿದರು.
ರೈತರನ್ನು ಗೌರವದಿಂದ ನಡೆಸಿಕೊಳ್ಳಲಿ
`ಬೆಳಗಾವಿಯಲ್ಲಿ ರೈತರ ಹೋರಾಟ ಅವರ ಹಕ್ಕು. ಆಸ್ತಿ, ಜಮೀನು ಕಳೆದುಕೊಳ್ಳುವುದರ ವಿರುದ್ಧ ಅವರು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಸೂಕ್ತ ಪರಿಹಾರ ನೀಡಿ, ಅವರ ಮನವೊಲಿಸಬೇಕು. ಗೌರವದಿಂದ ನಡೆಸಿಕೊಳ್ಳಬೇಕು. ಅದನ್ನು ಬಿಟ್ಟು ಸೀರೆ ಎಳೆಯುವುದು, ಆತ್ಮಹತ್ಯೆಗೆ ಪ್ರೇರೇಪಿಸುವುದು ಸರಿಯಲ್ಲ. ಈ ರೀತಿ ಪೊಲೀಸರ ದೌರ್ಜನ್ಯ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇದು ಖಂಡನೀಯ. ರೈತರನ್ನು ಗೌರವದಿಂದ ನಡೆಸಿಕೊಂಡು, ತಾಳ್ಮೆಯಿಂದ ಮಾತನಾಡಬೇಕು'
-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ