ರಮೇಶ್ ಜಾರಕಿಹೊಳಿ ಬಿಜೆಪಿಗೆ ಯಾವುದೇ ಕಾರಣಕ್ಕೂ ಮೋಸ ಮಾಡುವುದಿಲ್ಲ: ಸಚಿವ ಈಶ್ವರಪ್ಪ
ಬೆಳಗಾವಿ, ನ. 28: `ಗೋಕಾಕ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಆ ಪಕ್ಷಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಹಿಂದೆಯೇ ಏಕೆ ಹೇಳಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಬಿಟ್ಟು ಬಂದ ನಂತರ ಅವರಿಗೆ ಎಲ್ಲವೂ ನೆನಪಾಗಿದೆ. ಸತ್ಯವನ್ನು ಯಾವಾಗಲೂ ಸ್ಪಷ್ಟವಾಗಿ ಹೇಳಿದರೆ ಸತ್ಯ. ತಮಗೆ ಬೇಕಾದಂತೆ ತಿರುಚಿದರೆ ಅದು ಸತ್ಯವಾಗುವುದಿಲ್ಲ. ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷಕ್ಕೆ ಮೋಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ದ್ವಿಸದಸ್ಥ ಸ್ಥಾನಗಳಿವೆ. ಮೊದಲನೆ ಪ್ರಾಶಸ್ತ್ಯದ ಮತ ಬಿಜೆಪಿಗೆ ಕೊಡಿ, 2ನೆ ಪ್ರಾಶಸ್ತ್ಯದ ಮತವನ್ನು ತಮ್ಮ ಲಖನ್ ಜಾರಕಿಹೊಳಿ ಅವರಿಗೆ ಕೊಡಿ ಎಂದು ಮುಕ್ತವಾಗಿಯೇ ಹೇಳುತ್ತಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಇದನ್ನು ತಡೆದುಕೊಳ್ಳಲಾಗದೆ ಏನೇನೋ ಆರೋಪ ಮಾಡುತ್ತಿದ್ದಾರೆ. ಇದರಿಂದ ಅವರಿಗೆ ಲಾಭವಾಗುವುದಿಲ್ಲ ಎಂದು ತಿರುಗೇಟು ನೀಡಿದರು.
ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಅವರು ಪ್ರಥಮ ಪ್ರಾಶಸ್ತ್ಯದ ಮತ ಕೇಳಿಕೊಳ್ಳಬಹುದು. ಆದರೆ, ಬಿಜೆಪಿಯವರು ನಮ್ಮ ಅಭ್ಯರ್ಥಿ ಬೆಂಬಲಿಸುತ್ತಾರೆ. ಪಕ್ಷದ ಕಾರ್ಯಕರ್ತರು ಮತ್ತು ಮತದಾರರಲ್ಲಿ ಯಾವುದೇ ಗೊಂದಲವಿಲ್ಲ. ಹೀಗಾಗಿಯೇ ಹಳ್ಳಿಯಿಂದ ದಿಲ್ಲಿಯವರೆಗೂ ಬಿಜೆಪಿ ಪಕ್ಷ ಗೆಲ್ಲುತ್ತಿದೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ನಿಶ್ಚಿತವಾಗಿಯೂ ಜಯ ಗಳಿಸಲಿದೆ ಎಂದು ಈಶ್ವರಪ್ಪ ಭರವಸೆ ವ್ಯಕ್ತಪಡಿಸಿದರು.
ರಾಜ್ಯದ ವಿವಿಧ ಇಲಾಖೆ ಕಾಮಗಾರಿಗಳ ಟೆಂಡರ್ ನೀಡುವ ವೇಳೆ ಶೇ.40ರಷ್ಟು ಲಂಚ ಪಡೆಯಲಾಗುತ್ತಿದೆ ಎಂಬ ಆರೋಪದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಬಿಜೆಪಿ ಸರಕಾರ ಹಾಗೂ ಹಿಂದಿನ ಸರಕಾರದ ಅವಧಿಯಲ್ಲಿ ನೀಡಲಾದ ಎಲ್ಲ ಕಾಮಗಾರಿಗಳ ಟೆಂಡರ್ಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ. ಯಾರು ತಪ್ಪಿತಸ್ಥರಿದ್ದಾರೋ ಅವರಿಗೆ ಶಿಕ್ಷೆಯಾಗಲಿದೆ ಎಂದು ಈಶ್ವರಪ್ಪ ಸ್ಪಷ್ಟಣೆ ನೀಡಿದರು.