ವಿಡಿಯೋ ಕಾನ್ಫರೆನ್ಸ್ ವೇಳೆ ಅರೆನಗ್ನವಾಗಿ ಕಾಣಿಸಿಕೊಂಡ ವ್ಯಕ್ತಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶ
ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದ ವಿಚಾರಣೆ
ಬೆಂಗಳೂರು, ನ.30: ವಿಡಿಯೋ ಕಾನ್ಫರೆನ್ಸ್ ವೇಳೆ ಉಜಿರೆ ಎಸ್ಡಿಎಂಸಿಯ ಶ್ರೀಧರ್ ಭಟ್ ಎಂಬಾತ ಅರೆನಗ್ನವಾಗಿ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಹೈಕೋರ್ಟ್, ನ್ಯಾಯಾಲಯದ ಅಧಿಕಾರಿಗಳಿಗೆ ಆದೇಶ ಮಾಡಿದೆ.
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧದ ಸೀಡಿ ಪ್ರಕರಣದ ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್ನಲ್ಲಿ ವ್ಯಕ್ತಿಯೊಬ್ಬರು ಅರೆನಗ್ನವಾಗಿ ಪ್ರತ್ಯಕ್ಷವಾಗಿದ್ದಕ್ಕೆ ಸುಪ್ರೀಂಕೋರ್ಟ್ ವಕೀಲೆ ಇಂದಿರಾ ಜೈಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠವು ವಿಡಿಯೋ ಕಾನ್ಫರೆನ್ಸ್ನಲ್ಲಿ ಅರೆನಗ್ನವಾಗಿ ಕಾಣಿಸಿಕೊಂಡ ವ್ಯಕ್ತಿಗೆ ನೋಟಿಸ್ ನೀಡಲು ಆದೇಶ ಮಾಡಿತು.
ಇಂದಿರಾ ಜೈಸಿಂಗ್ ಆಕ್ಷೇಪ: ನಾನು ವಾದಿಸುತ್ತಿರುವಾಗ ವಿಡಿಯೋ ಕಾನ್ಫರೆನ್ಸ್ ಮೂಲಕ ಅರೆನಗ್ನ ದೇಹವನ್ನು ತೋರಿಸುತ್ತಿದ್ದಾನೆ. ಇದು ಮಹಿಳೆಯಾದ ನನಗೆ ಮುಜುಗರ ತರುವಂತಿದೆ. ಇದು ನ್ಯಾಯಾಂಗ ನಿಂದನೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ವರದಿ ಸಲ್ಲಿಕೆಗೆ ಆಕ್ಷೇಪ: ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಸಂಬಂಧ ಹೈಕೋರ್ಟ್ ಪೀಠಕ್ಕೆ ಎಸ್ಐಟಿಯ ಅಂತಿಮ ವರದಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ವಕೀಲೆ ಇಂದಿರಾ ಜೈಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು.
ಬಿಜೆಪಿ ಶಾಸಕ ರಮೇಶ್ ಅವರ ಮನವಿ ಮೇರೆಗೆ ಎಸ್ಐಟಿ ರಚಿಸಲಾಗಿದೆ. ಈ ಎಸ್ಐಟಿ ರಚನೆಯೇ ದೋಷಪೂರಿತ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾರನ್ನೂ ಹೆಚ್ಚು ಕಡಿಮೆ ಎಂದು ಪರಿಗಣಿಸುವುದಿಲ್ಲ ಎಂದು ತಿಳಿಸಿತು.
ಅಲ್ಲದೆ, ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದ ಅಂತಿಮ ವರದಿ ಸಲ್ಲಿಸದಂತೆ ಆದೇಶವಿದೆ. ಆದರೆ, ಮಧ್ಯಂತರ ಆದೇಶ ತೆರವಿಗೆ ಎಸ್ಐಟಿ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ, ಎಸ್ಐಟಿ ಅರ್ಜಿ ಸಲ್ಲಿಸಿದ ನಂತರ ಈ ಬಗ್ಗೆ ವಿಚಾರಣೆ ಮಾಡಲಾಗುವುದು ಎಂದು ಪ್ರಕರಣದ ವಿಚಾರಣೆಯನ್ನು ನ್ಯಾಯಪೀಠವು ಮುಂದೂಡಿತು.
ಹೆಚ್ಚು ಕಡಿಮೆ ಎಂದು ಪರಿಗಣಿಸಲ್ಲ
ಬಿಜೆಪಿ ಶಾಸಕ ರಮೇಶ್ ಅವರ ಮನವಿ ಮೇರೆಗೆ ಎಸ್ಐಟಿ ರಚಿಸಲಾಗಿದೆ. ಈ ಎಸ್ಐಟಿ ರಚನೆಯೇ ದೋಷಪೂರಿತ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾರನ್ನೂ ಹೆಚ್ಚು ಕಡಿಮೆ ಎಂದು ಪರಿಗಣಿಸುವುದಿಲ್ಲ ಎಂದು ತಿಳಿಸಿತು.
ಎಸ್ಐಟಿ ತನಿಖಾ ವರದಿಗೆ ಒಪ್ಪಿಗೆ
ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಲ್ಲಿಸಿರುವ ತನಿಖಾ ವರದಿಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಒಪ್ಪಿಗೆ ನೀಡಿದ್ದಾರೆ ಎಂದು ಹೈಕೋರ್ಟ್ಗೆ ಎಸ್ಐಟಿ ಪರ ವಕೀಲ ಪ್ರಸನ್ನಕುಮಾರ್ ತಿಳಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರ ವರದಿಯನ್ನು ಹೈಕೋರ್ಟ್ ಮಂಗಳವಾರ ಪರಿಶೀಲನೆ ನಡೆಸಿತು.