ಬೆಂಗಾವಲು ವಾಹನ ಪಲ್ಟಿ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಸಿದ್ದರಾಮಯ್ಯ, ಡಿಕೆಶಿ
ಚಿಕ್ಕಮಗಳೂರು, ಡಿ.3: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಾವಲು ನೀಡಿದ್ದ ಪೊಲೀಸ್ ವಾಹನವೊಂದು ತಾಲೂಕಿನ ಮಲ್ಲೇನಹಳ್ಳಿ ಸಮೀಪ ಅಪಘಾತಕ್ಕೀಡಾಗಿ ಸಿಬ್ಬಂದಿಯೊಬ್ಬರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆಯಿತು.
ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲು ನೆರವಾಗುವುದರ ಮೂಲಕ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಾನವೀಯತೆ ಮೆರೆದರು.
ಚಿಕ್ಕಮಗಳೂರಿನ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಸ್ವರಾಜ್ ಸಮಾವೇಶವನ್ನು ಮುಗಿಸಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕಾರಿಗೆ ಭದ್ರತೆ ಒಗದಿಸಿದ್ದ ಚಿಕ್ಕಮಗಳೂರು ಬೆಂಗಾವಲು ವಾಹನ ಮಲ್ಲೇನಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಕಾಫಿತೋಟದ ಹಳ್ಳಕ್ಕೆ ಉರುಳಿ ಬಿದ್ದಿದೆ.
ಈ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರ ತಲೆಗೆ ತೀವ್ರ ಪೆಟ್ಟಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಈ ವೇಳೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ತಮ್ಮ ಪ್ರಯಾಣವನ್ನು ಕೆಲಕಾಲ ಮೊಟಕುಗೊಳಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.