ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂದು ನನಗೂ ಮಾಹಿತಿ ಕೊಡುವವರು ಇದ್ದಾರೆ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ, ಡಿ. 4: ‘ಬಿಜೆಪಿ ಪಕ್ಷದವರು ನನ್ನ ಸಂಪರ್ಕದಲ್ಲಿಯೂ ಇದ್ದು, ಆ ಪಕ್ಷದಲ್ಲಿ ಏನೇನು ನಡಿಯುತ್ತಿದೆ ಎಂದು ಅವರೇ ನನಗೆ ಹೇಳುತ್ತಿದ್ದಾರೆ' ಎಂದು ಇಲ್ಲಿನ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಇಂದಿಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಶನಿವಾರ ಚಿಕ್ಕೋಡಿಯ ಕಾಗವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ಸಂಬಂಧ ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ಆ ಬಗ್ಗೆ ನಾನು ಏನೂ ಮಾತನಾಡಲು ಬಯಸುವುದಿಲ್ಲ' ಎಂದು ಸ್ಪಷ್ಟಣೆ ನೀಡಿದರು.
ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಸೋಲಿಸುವುದು ನಮ್ಮ ಗುರಿ ಎಂದು ಹೇಳುತ್ತಿದ್ದಾರೆ. ಆದರೆ, ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದು, ಪಕ್ಷ ಇನ್ನೂ ಜೀವಂತವಾಗಿದೆ. ಮೊದಲು ಅವರು ತಮ್ಮ ಪಕ್ಷದಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಆ ಬಳಿಕ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ ಮಾಡಿದರು.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಹಾಗೂ ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ. ಜಿಲ್ಲೆಯಲ್ಲಿ ಎಲ್ಲ ಕಡೆಗಳಲ್ಲಿ ಸ್ಥಳೀಯ ಸಂಸ್ಥೆಯ ಮತದಾರರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆಂದು ಲಕ್ಷ್ಮಿ ಹೆಬ್ಬಾಳ್ಕರ್ ಇದೇ ವೇಳೆ ತಿಳಿಸಿದರು.