ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಗೆಲುವು ನಿಶ್ಚಿತ: ಮುಖ್ಯಮಂತ್ರಿ ಬೊಮ್ಮಾಯಿ
ಹುಬ್ಬಳ್ಳಿ, ಡಿ.7: ವಿಧಾನಪರಿಷತ್ ಚುನಾವಣೆಗೆ ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಹಾಂತೇಶ್ ಕವಟಗಿಮಠ ಅವರ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿ. ಅವರಿಂದ ನಮಗೆ ಯಾವುದೇ ತೊಂದರೆ ಇಲ್ಲ ಎಂದರು.
ಮಹಾಂತೇಶ್ ಕವಟಗಿಮಠ ಅವರ ಗೆಲುವಿಗೆ ಬೆಳಗಾವಿಯಲ್ಲಿ ಎಲ್ಲ ಪ್ರಮುಖರನ್ನು ಭೇಟಿ ಮಾಡಿ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲು ಬೇಕಾದ ಎಲ್ಲ ತಂತ್ರಗಾರಿಕೆಗಳನ್ನು ರೂಪಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ನಮ್ಮ ಪಕ್ಷದ ಅಭ್ಯರ್ಥಿ ಪರ ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಪಕ್ಷದ ಅಭ್ಯರ್ಥಿ ಕವಟಗಿಮಠ ಗೆಲುವಿಗೆ ಒತ್ತು ನೀಡಲು ಬೆಳಗಾವಿಗೆ ತೆರಳಿ ಸಂಸದರು, ಸಚಿವರು ಹಾಗೂ ಪಕ್ಷದ ಎಲ್ಲ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಅವರು ತಿಳಿಸಿದರು.