ಪೋಲೀಸರ ಮೇಲಿನ ಹಲ್ಲೆ: ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡನೆ
ಬೆಂಗಳೂರು, ಡಿ.7: ಯಲಹಂಕ ನ್ಯೂ ಟೌನ್ ಪ್ರದೇಶದಲ್ಲಿ ಸೋಮವಾರ, ನೈಟ್ ರೌಂಡ್ಸ್ ಕರ್ತವ್ಯದ ಮೇಲಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡಿಸಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ, ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಿರ್ದೇಶನ ನೀಡಿದ್ದಾರೆ.
ಮಂಗಳವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರನ್ನು ಸಂಪರ್ಕಿಸಿ, ವಿಷಯವನ್ನು ಪ್ರಸ್ತಾಪಿಸಿ ‘ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಘಟನೆಯ ದೃಶ್ಯಾವಳಿಗಳನ್ನು ನೋಡಿದ್ದೇನೆ, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ಗಳ ಮೇಲೆ ಕೆಲವು ಪುಂಡರಿಂದ ನಡೆದ ಹಲ್ಲೆ ಘಟನೆ ಖಂಡನೀಯ’ ಎಂದು ತಿಳಿಸಿದರು.
ಈ ರೀತಿಯಾಗಿ ಕಾನೂನನ್ನು ಕೈಗೆ ತೆಗೆದುಕೊಂಡು, ಜನರಿಗೆ ರಕ್ಷಣೆ ನೀಡುವ ಪೋಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲದೆ, ಹಲ್ಲೆಗೊಳಗಾದ ಪೊಲೀಸರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಪೊಲೀಸ್ ಆಯುಕ್ತರಿಗೆ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.