ಮೇಕೆದಾಟು ಪಾದಯಾತ್ರೆಗೆ ನಿಷೇಧ ಹೇರಿದ ರಾಜ್ಯ ಸರಕಾರ

ಬೆಂಗಳೂರು, ಜ. 12: ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಆಗ್ರಹಿಸಿ `ನಮ್ಮ ನೀರು ನಮ್ಮ ಹಕ್ಕು' ಘೋಷಣೆಯೊಂದಿಗೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ನಿರ್ಬಂಧಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ದೃಢ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಪಾದಯಾತ್ರೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಗುಂಪು ಸೇರುತ್ತಿದ್ದು, ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಒಡಾಡುತ್ತಿವೆ. ಹೀಗಾಗಿ ಕೂಡಲೇ ಪಾದಯಾತ್ರೆ ನಿಲ್ಲಿಸಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರವಿಕುಮಾರ್ ತಮ್ಮ ಆದೇಶದಲ್ಲಿ, ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ಒಂದು ವೇಳೆ ಪಾದಯಾತ್ರೆ ನಿಲ್ಲಿಸದಿದ್ದರೆ ರಾಮನಗರ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಸಾರಿಗೆ ಆಯುಕ್ತರು ಸೂಕ್ತ ಮುನ್ನಚ್ಚರಿಕೆ ಕೈಗೊಳ್ಳಬೇಕು. 2005ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಿ.ರವಿಕುಮಾರ್, ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ನಿರ್ದೆಶನ ನೀಡಿದ್ದಾರೆ.
`ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸರಕಾರ ಅನುಮತಿ ನೀಡಿಲ್ಲ ಎಂದರೆ ಅದನ್ನು ತಡೆಯಲು ನೀವು ಏಕೆ ಕಾಯುತ್ತಿದ್ದೀರಿ' ಎಂದು ಹೈಕೋರ್ಟ್ ರಾಜ್ಯ ಸರಕಾರವನ್ನು ಪ್ರಶ್ನಿಸಿತ್ತು. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಬುಧವಾರ ರಾತ್ರಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರ ಮೂಲಕ ಮೇಲ್ಕಂಡ ಆದೇಶ ಹೊರಡಿಸಿದ್ದಾರೆ.
ಜ.9ರಿಂದ ಆರಂಭವಾಗಿರುವ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ `ನೀರಿಗಾಗಿ ನಡಿಗೆ' ಪಾದಯಾತ್ರೆ ನಾಲ್ಕು ದಿನ ಪೂರೈಸಿದ್ದು, ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ. ಇದೇ ವೇಳೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಬೆಳವಣಿಗೆಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಮುಖಂಡರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳು ದಟ್ಟವಾಗಿವೆ.
`ಏನೇನೂ ಸುದ್ದಿ ಹಬ್ಬಿಸುತ್ತಿದ್ದಾರೆ. ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ ನಾಳೆ ಬೆಳಗ್ಗೆ ಇಲ್ಲಿಂದಲೇ(ರಾಮನಗರ) ಪಾದಯಾತ್ರೆ ಆರಂಭವಾಗಲಿದೆ. ಡಾ.ಅಶ್ವಥ್ ನಾರಾಯಣ ಅವರೊಬ್ಬ ಸಚಿವರು. ಅವರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಟಿ ಮಾಡಬಹುದಿತ್ತು. ಆದರೆ, ರಾಮನಗರಕ್ಕೆ ಬಂದು ಸುದ್ದಿಗೋಷ್ಠಿ ಮಾಡಿದ್ದಾರೆ. ಇಲ್ಲಿಗೆ ಬಂದು ಬಿಜೆಪಿ ಕಾರ್ಯಕರ್ತರಿಗೆ ಗದ್ದಲ ಎಬ್ಬಿಸೋಕೆ ಹೇಳಿ ಹೋಗಿದ್ದಾರೆ. ಯಾರು ಏನೇ ಹೇಳಲಿ ನಿಮ್ಮ ಆಶೀರ್ವಾದ ಇರಲಿ. ನಮ್ಮ ನೀರು ನಮ್ಮ ಹಕ್ಕು. ನೀರಿಗಾಗಿ ನಮ್ಮ ಹೋರಾಟ ನಿಲ್ಲದು'
-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ







