ನರಗುಂದ; ಸಂಘಪರಿವಾರದಿಂದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ: ಓರ್ವ ಮೃತ್ಯು
ಮತ್ತೋರ್ವನಿಗೆ ಗಂಭೀರ ಗಾಯ
ನರಗುಂದ: ಹೋಟೆಲ್ ಬಂದ್ ಮಾಡಿ ಮನೆಗೆ ತೆರಳುತ್ತಿದ್ದ ಇಬ್ಬರು ಯುವಕರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಯುವಕ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ನರಗುಂದ ನಿವಾಸಿ ಸಮೀರ್ ಶಹಾಪುರ (19) ಮೃತ ಯುವಕ. ಗಂಭೀರ ಗಾಯಗೊಂಡ ಸಂಶೀರ್ ಎಂಬವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನರಗುಂದದಲ್ಲಿ ಹೋಟೆಲ್ ನಡೆಸುತ್ತಿದ್ದ ಸಮೀರ್ ನಿನ್ನೆ ರಾತ್ರಿ ಹೋಟೆಲ್ ಬಂದ್ ಮಾಡಿ ಸಮೀಪದಲ್ಲೇ ಸ್ಟುಡಿಯೋ ಅಂಗಡಿ ಇಟ್ಟುಕೊಂಡಿರುವ ಸ್ನೇಹಿತ ಸಂಶೀರ್ ನನ್ನು ಕರೆದುಕೊಂಡು ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ನರಗುಂದ ಸ್ಟೇಟ್ ಬ್ಯಾಂಕ್ ಸಮೀಪ ಕಾದು ಕುಳಿತಿದ್ದ ಸಂಘಪರಿವಾರದ ಸುಮಾರು 10-15 ಮಂದಿ ಏಕಾಏಕಿ ಬೈಕ್ ತಡೆದು ನಿಲ್ಲಿಸಿ ಮಾರಕಾಸ್ತ್ರಗಳಿಂದ ಇಬ್ಬರ ಮೇಲೂ ದಾಳಿ ನಡೆಸಿದ್ದಾರೆ ಪರಾರಿಯಾಗಿದ್ದಾರೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಸಮೀರ್ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗಿನ ಜಾವ ಮೃತಪಟ್ಟಿದ್ದು, ಸಂಶೀರ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಂಘಪರಿವಾರದ ಕಾರ್ಯಕರ್ತರಾದ ಮಲ್ಲಿಕಾರ್ಜುನ ಹಿರೇಮಠ, ಕುಮಾರ್ ಸೇರಿದಂತೆ ಇತರರು ಈ ಕೃತ್ಯವೆಸಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ದೂರು ನೀಡಿದೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.