ಸೀಮಾ ನಿರ್ಣಯ ಆಯೋಗಕ್ಕೆ ಮೀಸಲಾತಿ ಅಧಿಕಾರ: ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ಮತ್ತೆ ಕಾಲಾವಕಾಶ
ಬೆಂಗಳೂರು, ಜ.19: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ಗಳ ಗಡಿ ಮತ್ತು ಮೀಸಲು ನಿಗದಿ ಅಧಿಕಾರ ಸಂಬಂಧ ರಾಜ್ಯ ಚುನಾವಣಾ ಆಯೋಗ ಬದಲಾಗಿ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗಕ್ಕೆ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಮತ್ತೆ ನಾಲ್ಕು ವಾರ ಕಾಲಾವಕಾಶ ನೀಡಿದೆ.
ಬುಧವಾರ ಈ ಕುರಿತು ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರುತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರಕಾರದ ಪರ ವಕೀಲರು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಹಿಂದಿನ ವಿಚಾರಣೆ ಸಂದರ್ಭದಲ್ಲಿಯೇ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ್ದೆವು ಅಲ್ಲವೇ ಎಂದು ಪ್ರಶ್ನಿಸಿತು.
ಆನಂತರ, ವಕೀಲರು ಉತ್ತರಿಸಿ, ಅರ್ಜಿಯಲ್ಲಿ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಲಾಗಿದೆ. ಹೀಗಾಗಿ, ಅರ್ಜಿಗೆ ವಿವರವಾಗಿ ಆಕ್ಷೇಪಣೆ ಸಲ್ಲಿಸಬೇಕಿರುವುದರಿಂದ ಮತ್ತಷ್ಟು ಸಮಯಾವಕಾಶ ಅಗತ್ಯವಿದೆ ಎಂದು ಮನವಿ ಸಲ್ಲಿಸಿದರು.
ಇದೇ ವೇಳೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ವಾದ ಮಂಡಿಸಿ, ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಪಂಚಾಯತ್ಗಳ ಅವಧಿ ಈಗಾಗಲೇ ಪೂರ್ಣಗೊಂಡಿದ್ದು, ಅವುಗಳಿಗೆ ಚುನಾವಣೆ ನಡೆಸಲು ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಕ್ಷೇತ್ರ ವಿಂಗಡಣೆ ಹಾಗೂ ಮೀಸಲು ನಿಗದಿ ಅಂತಿಮಗೊಂಡ ಬಳಿಕ ಸರಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ. ಇದರಿಂದಾಗಿ ಆಯೋಗ ಚುನಾವಣೆಗಳನ್ನು ನಡೆಸಲು ಕೈಗೊಂಡಿರುವ ಎಲ್ಲ ಸಿದ್ಧತೆಗಳೂ ವ್ಯರ್ಥವಾಗಲಿವೆ ಎಂದರು.
ವಾದ ಆಲಿಸಿದ ಪೀಠ, ಮೊದಲು ಸರಕಾರ ಆಕ್ಷೇಪಣೆ ಸಲ್ಲಿಸಲಿ. ನಂತರ ಈ ಎಲ್ಲ ಸಂಗತಿಗಳ ವಿಚಾರಣೆ ನಡೆಸೋಣ ಎಂದು ತಿಳಿಸಿ, ಅರ್ಜಿಗೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಗಡುವು ನೀಡಿ, ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಿತು.