ಬಿಜೆಪಿಯಲ್ಲಿ ಯಡಿಯೂರಪ್ಪ ಯುಗ ಅಂತ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
"ಕ್ರೀಯಾಶೀಲವಾದ ಎರಡನೆ ಸಾಲಿನ ನಾಯಕತ್ವ ಅಗತ್ಯವಿದೆ"
ಬಸನಗೌಡ ಪಾಟೀಲ್ ಯತ್ನಾಳ್
ಬೆಳಗಾವಿ: ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಪಕ್ಷದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ನಂತರ ಹೇಗೆ ನರೇಂದ್ರ ಮೋದಿ ನಾಯಕತ್ವ ವಹಿಸಿಕೊಂಡಿದ್ದಾರೋ, ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ಕ್ರೀಯಾಶೀಲವಾದ ಎರಡನೆ ಸಾಲಿನ ನಾಯಕತ್ವಕ್ಕೆ ಮನ್ನಣೆ ನೀಡಬೇಕಾದ ಅಗತ್ಯವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಯುಗ ಅಂತ್ಯವಾಗಿದೆ. ಅವರ ಸಮಕಾಲೀನರಾದ ಇನ್ನೂ ಮೂರು, ನಾಲ್ಕು ಜನರ ಯುಗವು ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾಗಲಿದ್ದಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಒಳ್ಳೆಯ ತಂಡವನ್ನು ಸಿದ್ಧ ಮಾಡುತ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಾನು ಸಚಿವ ಸ್ಥಾನಕ್ಕೆ ಹೋರಾಟ ಮಾಡುವುದಿಲ್ಲ. ಚುನಾವಣೆಗೆ ಆರು ತಿಂಗಳು ಇರುವಾಗ ಸಚಿವ ಸ್ಥಾನ ಕೊಟ್ಟರೆ ಏನು ಪ್ರಯೋಜನ. ಸಚಿವರಾಗಿ ಬೆಂಗಳೂರಿನಲ್ಲಿ ಕುಳಿತರೆ ನಮ್ಮ ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಈಗ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಹುರುಪಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಯುಗಾದಿ ಬರುತ್ತಿದೆ. ಬದಲಾವಣೆಯೂ ನಿಶ್ಚಿತ. ನಮ್ಮ ರಾಜ್ಯದಲ್ಲಿಯೂ ಒಳ್ಳೆಯ ಬೆಳವಣಿಗೆಗಳು ಆಗಲಿವೆ. ನಮ್ಮ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಜೆಟ್ ಅಧಿವೇಶನಕ್ಕೂ ಮುಂಚಿತವಾಗಿ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಮಾತುಕೊಟ್ಟಿದ್ದರು. ಅದರಂತೆ, ಅವರು ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ನೀಟ್ ಸೂಪರ್ ಸ್ಪೆಷಾಲಿಟಿ ಪರೀಕ್ಷೆ: ಬಾಗಲಕೋಟೆ ವೈದ್ಯ ಚಿದಾನಂದ ಎರಡು ವಿಷಯಗಳಲ್ಲಿ ದೇಶಕ್ಕೆ ಪ್ರಥಮ