ರಾಜ್ಯದಲ್ಲಿ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಯಾದಗಿರಿ: ಗುಜರಾತ್ ರಾಜ್ಯ ಸರಕಾರವು ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಶನಿವಾರ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ' ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಿಎಂ ಬೊಮ್ಮಾಯಿ ಇಲ್ಲಿನ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿದ್ಯಾರ್ಥಿಗೆ ನೈತಿಕ ಶಿಕ್ಷಣ ಕಲಿಯಲು ನೆರವಾಗುವ ನೈತಿಕ ಉಪದೇಶ ಇರುವುದರಿಂದ ನಿನ್ನೆ ಗುಜರಾತ್ ಸರ್ಕಾರ ಇದೇ ರೀತಿಯ ನಿರ್ಧಾರ ಕೈಗೊಂಡಿದೆ. ಶಿಕ್ಷಣ ಇಲಾಖೆಯು ಈ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಂಪುಟದ ಮುಂದೆ ಮಂಡಿಸಿ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ಮಕ್ಕಳ ಶಿಕ್ಷಣದಲ್ಲಿ ನೈತಿಕ ವಿಚಾರಗಳನ್ನು ಅಲವಡಿಸುವ ಬಗ್ಗೆ ಹಿರಿಯರು ಹೇಳಿದ್ದಾರೆ, ನಮ್ಮದೂ ಅದೇ ಧ್ಯೇಯವಾಗಿದೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.