ಮಡಿಕೇರಿ: ನಕ್ಷತ್ರ ಆಮೆ ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ
ಮಡಿಕೇರಿ ಮಾ.19 : ಅಳಿವಿನ ಅಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕ ಬಂಧಿಸಿದೆ.
ಜಿಯಾವುಲ್ಲಾ ಖಾನ್ ಮತ್ತು ಸನಾವುಲ್ಲಾ ಖಾನ್ ಎಂಬವರೇ ಬಂಧಿತ ಆರೋಪಿಗಳಾಗಿದ್ದು, 1 ಜೀವಂತ ನಕ್ಷತ್ರ ಆಮೆಯನ್ನು ರಕ್ಷಿಸಲಾಗಿದೆ.
ವಿರಾಜಪೇಟೆ ರಾಜ್ಯ ಹೆದ್ದಾರಿಯ ಶಕ್ತಿನಗರದ ಬಳಿ ಇರುವ ಮೇಕೇರಿ ಬಸ್ಸು ತಂಗುದಾಣದ ಬಳಿ ನಕ್ಷತ್ರ ಆಮೆಯೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಡಿಕೇರಿಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಇದನ್ನು ಆಧರಿಸಿ ದಾಳಿ ನಡೆಸಿದ ಸಂದರ್ಭ ಆರೋಪಿಗಳ ವಶಕ್ಕೆ ಪಡೆದುಕೊಂಡು ಬಂಧಿಸಿ, ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು. ಸವಿ, ಹೆಡ್ ಕಾನ್ಸ್ಟೇಬಲ್ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್ಟೇಬಲ್ಗಳಾದ ಸ್ವಾಮಿ ಮತ್ತು ಮಂಜುನಾಥ ಅವರುಗಳು ಕಾರ್ಯಾಚರಣೆ ನಡೆಸಿದರು.