ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನಿರಾಕರಿಸದಂತೆ ಅಧಿಕಾರಿಗಳಿಗೆ ನಿರ್ದೇಶನ:ಸಚಿವ ಬಿ.ಸಿ.ನಾಗೇಶ್
ಎಸೆಸೆಲ್ಸಿ ಪರೀಕ್ಷೆ
ಬೆಂಗಳೂರು, ಮಾ. 25: ‘ಎಸೆಸೆಲ್ಸಿ ಪರೀಕ್ಷಾ ಶುಲ್ಕ ಬಾಕಿ ಉಳಿಸಿಕೊಂಡಿರುವ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರವೇಶ ಪತ್ರ ನೀಡಲು ಯಾವುದೇ ಕಾರಣಕ್ಕೆ ನಿರಾಕರಿಸದಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯ ಮಂಜುನಾಥ್ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ‘ಈಗಾಗಲೇ ಡಿಡಿಪಿಐ ಮತ್ತು ಬಿಇಒಗಳ ಜೊತೆ ಸಭೆ ನಡೆಸಿ ಯಾವುದೇ ವಿದ್ಯಾರ್ಥಿಗೆ ಹಾಲ್ ಟಿಕೆಟ್ ನಿರಾಕರಿಸದಂತೆ ಸೂಚನೆ ನೀಡಲಾಗಿದೆ. ಪರೀಕ್ಷಾ ಶುಲ್ಕ ಬಾಕಿ ಉಳಿಸಿಕೊಂಡಿರುವ ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆ ಮಾಡಬಾರದೆಂದು ಶಾಲಾ ಆಡಳಿತ ಮಂಡಳಿಗೆ ಸ್ಪಷ್ಟನೆ ನೀಡಲಾಗಿದೆ. ಈ ಬಗ್ಗೆ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.
‘ಕೆಲ ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿ ಶುಲ್ಕ ಬಾಕಿ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಕೊಡುವುದಿಲ್ಲ ಎನ್ನುವುದು, ಟಿಸಿ, ಅಂಕಪಟ್ಟಿ ನೀಡವುದಿಲ್ಲ ಎಂದು ಬೆದರಿಸುವುದು ಅಥವಾ ಶಾಲೆಯಿಂದ ಹೊರಗೆ ನಿಲ್ಲಿಸಿರುವುದು ಸರಿಯಲ್ಲ. ಈ ಬಗ್ಗೆ ಇಲಾಖೆ ಗಮನಕ್ಕೆ ಬಂಧ ಕಾರಣ ಕೆಲ ದಿನಗಳ ಹಿಂದೆಯೇ ಅಧಿಕಾರಿಗಳ ಜೊತೆ ಸಭೆ ನಡೆಸಿ ನಿರ್ದೇಶನ ನೀಡಿದ್ದು, ಯಾರೂ ಆತಂಕಗೊಳ್ಳಬಾರದು' ಎಂದು ಅವರು ಮನವಿ ಮಾಡಿದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸದಸ್ಯ ಮಂಜುನಾಥ್, ‘ಅನುದಾನ ಮತ್ತು ಖಾಸಗಿ ಶಾಲೆಗಳಲ್ಲಿ ಶುಲ್ಕ ಕಟ್ಟದಿರುವ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಗೆ ಇರಿಸುವುದು, ಪ್ರವೇಶ ಪತ್ರ ಕೊಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾರೆ. ಪೆÇೀಷಕರು ಈ ಬಗ್ಗೆ ನನ್ನ ಬಳಿ ಬಂದು ಅಳಲು ತೋಡಿಕೊಂಡಿದ್ದಾರೆ. ಇದು ಕೇವಲ ನನ್ನ ಕ್ಷೇತ್ರದ ಸಮಸ್ಯೆ ಅಲ್ಲ. ಹೀಗಾಗಿ ಸರಕಾರ ಕೂಡಲೇ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಬೇಕು' ಎಂದು ಆಗ್ರಹಿಸಿದರು.
‘ಅನುದಾನಿತ ಹಾಗೂ ಖಾಸಗಿ ಶಾಲೆಗಳು ವಿದ್ಯಾರ್ಥಿಗಳು ಶುಲ್ಕ ಪಾವತಿಸಿಲ್ಲವೆಂದು ಪ್ರವೇಶಪತ್ರ ನೀಡುವುದನ್ನು ನಿರಾಕರಿಸಬಾರದೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ'
-ಬಿ.ಸಿ.ನಾಗೇಶ್ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ