ಜಾಗತಿಕ ಹೂಡಿಕೆದಾರರ ಸಮ್ಮೇಳನ ಫಲಶ್ರುತಿ ಸಾಮಾನ್ಯರಿಗೆ ಲಭ್ಯವಾಗಲಿ: ಸಚಿವ ಮುರುಗೇಶ್ ನಿರಾಣಿ
ಬೆಂಗಳೂರು, ಮಾ. 31: ‘ದಾವೋಸ್ನಂತಹ ಸಣ್ಣ ರಾಷ್ಟ್ರಗಳು ಹೂಡಿಕೆದಾರರ ಸಮಾವೇಶ ಆಯೋಜನೆಗೆ ನಮಗೆ ಮಾದರಿಯಾಗಬೇಕು. ಉತ್ತಮ ಮಾದರಿಗಳನ್ನು ಅನುಸರಿಸಿ ನಾವು ಈ ಬಾರಿ ಆಯೋಜಿಸಲಿರುವ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ನಮ್ಮ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣವನ್ನು ಸೃಷ್ಟಿಸಬೇಕು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಗುರುವಾರ ತನ್ನ ಅಧ್ಯಕ್ಷತೆಯಲ್ಲಿ ನಡೆದ ಸಮನ್ವಯ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅಭಿವೃದ್ಧಿಗೆ ಪೂರಕವಾಗಿ ಮುಖ್ಯಮಂತ್ರಿಗಳು ನೀಡಿದ ಸಲಹೆಗಳನ್ನು ಗಮನದಲ್ಲಿರಿಸಿ ಸಮ್ಮೇಳನ ಆಯೋಜನೆಯಾಗಬೇಕು. ಈ ಸಂಬಂಧ ನೀತಿ ನಿರೂಪಣೆಯಲ್ಲಿ ಯಾವುದಾದರೂ ಲೋಪಗಳಿದ್ದರೆ ಅವುಗಳನ್ನು ಶೀಘ್ರ ಸರಿಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಪೌರಾಡಳಿತ, ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್, ತಮ್ಮ ಇಲಾಖೆ ವತಿಯಿಂದ ಎಲ್ಲ ಸವಲತ್ತುಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಾಣಿಜ್ಯೋದ್ಯಮಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.