ಕೋವಿಡ್ 4ನೇ ಅಲೆ ಭೀತಿ; ಯಾವುದೇ ಕಾರಣಕ್ಕೂ ಶಾಲೆಗಳನ್ನು ಬಂದ್ ಮಾಡುವುದಿಲ್ಲ: ಸಚಿವ ಬಿ.ಸಿ ನಾಗೇಶ್
ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ 'ಯಾವುದೇ ಕಾರಣಕ್ಕೂ ಶಾಲೆಗಳನ್ನು ಬಂದ್ ಮಾಡುವುದಿಲ್ಲ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಈಗಾಗಲೇ ಸಿಎಂ ಬೊಮ್ಮಾಯಿ ಕೂಡಾ ಈ ಸಂಬಂಧ ಸಭೆ ನಡೆಸಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡುವ ನಿಯಮಗಳೇನಿದೆ ಅದನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಶಿಕ್ಷಣ ಇಲಾಖೆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದು ತಿಳಿಸಿದರು.
'ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಬಂದ್ ಮಾಡುವುದಿಲ್ಲ' ಎಂದು ಸ್ಪಷ್ಟ ಪಡಿಸಿದರು.
'ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳುತ್ತಿದ್ದಾರೆ. ಆದರೆ ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ' ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ಬಳಿಕ ರಾಜ್ಯ ಸರಕಾರ ಹೊಸ ಮಾರ್ಗ ಸೂಚಿ ಪ್ರಕಟಿಸಿದೆ.