ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು, ಮೇ 6: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ, ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಶುಕ್ರವಾರ ಮಳೆಯಾಗಿದೆ. ಮೇ 9ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಪ್ರಾರಂಭವಾಗಿದೆ. ಎ.29ರಿಂದ ಮೇ 5ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 12 ಮಿ.ಮೀ ಮಳೆ ಬದಲಾಗಿ 19 ಮಿ.ಮೀ ಮಳೆಯಾಗಿದೆ. ಅಂದರೆ ಶೇ.63ರಷ್ಟು ಹೆಚ್ಚು ಸುರಿದಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 6ರಂದು ಬಾಗಲಕೋಟೆ ನಗರದಲ್ಲಿ ಗಾಳಿ, ಮಿಂಚು-ಗುಡುಗು ಅಬ್ಬರದ ಜತೆ ಸ್ವಲ್ಪ ಹೊತ್ತು ಮಳೆ ಸುರಿದಿದೆ. ದಾವಣಗೆರೆ ಜಿಲ್ಲೆಯಲ್ಲಿ 5 ಕಚ್ಚಾ ಮನೆಗಳು ಹಾಗೂ ಹತ್ತಾರು ಎಕರೆ ಬೆಳೆ ಹಾನಿ ಸಂಭವಿಸಿದೆ.