ಶಬ್ದಮಾಲಿನ್ಯ ಯಾರೇ ಮಾಡಿದರೂ ಕ್ರಮ: ಸಚಿವ ಆನಂದ್ ಸಿಂಗ್
ಬೆಂಗಳೂರು, ಮೇ 10: ಧ್ವನಿವರ್ಧಕ ವಿಚಾರದಲ್ಲಿ ಎಲ್ಲರೂ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಬೇಕು. ಶಬ್ದಮಾಲಿನ್ಯ ಮಾಡಿದವರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಮಂಗಳವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವಿದೆ. ಸುಪ್ರೀಂಕೋರ್ಟ್ ಈ ಹಿಂದೆ ನೀಡಿರುವ ಆದೇಶವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಾರಿ ಮಾಡುವ ಕೆಲಸ ಆಗುತ್ತಿದೆ ಎಂದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೈಕೋರ್ಟ್ ಆದೇಶದ ಅನ್ವಯ ಶಬ್ದ ಮಾಪನ ಉಪಕರಣಗಳನ್ನು ಖರೀದಿಸಿ ಪೊಲೀಸ್ ಇಲಾಖೆಗೆ ನೀಡಿದ್ದು, ಉಪಕರಣಗಳ ಉಪಯೋಗಿಸುವ ಕುರಿತು ತಾಂತ್ರಿಕ ತರಬೇತಿ ನೀಡಲಾಗಿರುತ್ತದೆ ಎಂದರು.
ಶಬ್ದಮಾಲಿನ್ಯ ದೂರುಗಳ ಕುರಿತಾಗಿ ಪೊಲೀಸ್ ಇಲಾಖೆಯಿಂದ ಕೋರಿಕೆ ಬಂದ ಸಂದರ್ಭಗಳಲ್ಲಿ ಮಂಡಳಿಯು ಜಂಟಿಯಾಗಿ ಸ್ಥಳ ಪರಿವೀಕ್ಷಣೆ ಹಾಗೂ ಶಬ್ದ ಮಾಪನ ಮಾಡಿ, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸ್ಥಳೀಯರು ಬಂದು ದೂರು ನೀಡಿದರೂ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.