ಹಜ್ ಯಾತ್ರಿಕರಿಗೆ ಬೆಂಗಳೂರು ವಿಮಾನ ನಿಲ್ದಾಣದಿಂದಲೇ ಪ್ರಯಾಣಿಸಲು ವ್ಯವಸ್ಥೆ ಕಲ್ಪಿಸಿರುವುದು ಖಂಡನೀಯ: ಯು.ಟಿ. ಖಾದರ್
ಮಂಗಳೂರು: ಹಜ್ ಯಾತ್ರಿಕರ ಹಿತದೃಷ್ಟಿಯಿಂದ ಕಾಂಗ್ರೆಸ್ ಸರಕಾರದ ಆಡಳಿತವಿದ್ದಾಗ ದ.ಕ., ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಹಜ್ ಯಾತ್ರಿಕರಿಗೆ ಮಂಗಳೂರಿನಿಂದ ಮತ್ತು ಗುಲ್ಬರ್ಗ ಆಸುಪಾಸಿನ ಜಿಲ್ಲೆಯ ಯಾತ್ರಿಕರಿಗೆ ಹೈದರಾಬಾದ್ ವಿಮಾನ ನಿಲ್ದಾಣಗಳ ಮೂಲಕ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರೆ ಇದೀಗ ರಾಜ್ಯ ಬಿಜೆಪಿ ಸರಕಾರವು ರಾಜ್ಯದ ಎಲ್ಲಾ ಜಿಲ್ಲೆಗಳ ಯಾತ್ರಿಕರಿಗೆ ಬೆಂಗಳೂರು ವಿಮಾನ ನಿಲ್ದಾಣದಿಂದಲೇ ಪ್ರಯಾಣಿಸಲು ವ್ಯವಸ್ಥೆ ಕಲ್ಪಿಸಿರುವುದು ಖಂಡನೀಯ ಎಂದು ರಾಜ್ಯ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ, ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಸಮೀಪದ ವಿಮಾನ ನಿಲ್ದಾಣಗಳ ಮೂಲಕ ಪ್ರಯಾಣಿಸಲು ಅವಕಾಶ ಕಲ್ಪಿಸಿದರೆ ಹಜ್ ಯಾತ್ರಿಕರಿಗೆ ಅನುಕೂಲವಾಗುತ್ತಿತ್ತು. ಆದರೆ ರಾಜ್ಯ ಸರಕಾರದ ಕ್ರಮದಿಂದ ಯಾತ್ರಿಕರು ತೊಂದರೆ ಅನುಭವಿಸುವಂತಾಗಿದೆ. ಈ ಹಿಂದೆ ಯಾತ್ರಿಕರಿಗೆ ಆಗುತ್ತಿದ್ದ ಸಮಸ್ಯೆ, ತೊಂದರೆಯನ್ನು ತಪ್ಪಿಸುವ ಸಲುವಾಗಿ ಕಾಂಗ್ರೆಸ್ ಸರಕಾರ ದಿಟ್ಟ ಕ್ರಮ ಕೈಗೊಂಡಿದ್ದರೆ ಹಾಲಿ ಬಿಜೆಪಿ ಸರಕಾರ ಹಜ್ ಯಾತ್ರಿಕರನ್ನು ಸಮಸ್ಯೆಗೆ ಸಿಲುಕಿಸಿದೆ ಎಂದು ಯು.ಟಿ. ಖಾದರ್ ಅಪಾದಿಸಿದರು.