ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ
ಬೆಂಗಳೂರು, ಮೇ 27: ರಾಜ್ಯ ಸರಕಾರದ ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಹಾಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರ ಸೇವಾ ಅವಧಿಯು ಮೇ 31ಕ್ಕೆ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಂದಿತಾ ಶರ್ಮ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಶುಕ್ರವಾರ ಸರಕಾರ ಆದೇಶ ಹೊರಡಿಸಿದೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿ ನೇಮಕ ಸಂಬಂಧ ಚರ್ಚೆ ನಡೆದಿದ್ದು, ಮುಖ್ಯಮಂತ್ರಿಗೆ ಮುಖ್ಯ ಕಾರ್ಯದರ್ಶಿ ನೇಮಕದ ಅಧಿಕಾರ ನೀಡಲಾಗಿತ್ತು. ಅದರಂತೆ, ವಿದೇಶ ಪ್ರವಾಸದಿಂದ ಹಿಂದಿರುಗಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೂತನ ಮುಖ್ಯ ಕಾರ್ಯದರ್ಶಿಯನ್ನು ನೇಮಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿಗಳಾದ ವಂದಿತಾ ಶರ್ಮ, ಐಎನ್ಎಸ್ ಪ್ರಸಾದ್, ರಜನೀಶ್ ಗೋಯಲ್, ಗೌರವ್ ಗುಪ್ತ, ಶಾಲಿನಿ ರಜನೀಶ್ ಸೇರಿದಂತೆ ಸೇವಾ ಹಿರಿತನ ಹೊಂದಿರುವ ಅಧಿಕಾರಿಗಳು ಪಟ್ಟಿಯಲ್ಲಿದ್ದರು. ಅಂತಿಮವಾಗಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಂದಿತಾ ಶರ್ಮ ಅವರನ್ನು ನೇಮಕ ಮಾಡಿದ್ದಾರೆ.