ಬಳ್ಳಾರಿ | ಅನುಮಾನಾಸ್ಪದ ಸಾವು ಪ್ರಕರಣ; ದಲಿತ ವ್ಯಕ್ತಿಗೆ ಕಂಬಕ್ಕೆ ಕಟ್ಟಿ ಥಳಿತ: ಎಫ್ ಐಆರ್ ದಾಖಲು
ಬಳ್ಳಾರಿ: ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ದಲಿತ ವ್ಯಕ್ತಿಯನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ನಡೆದಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ.
ಜಿಲ್ಲೆಯ ಸಂಡೂರು ತಾಲೂಕಿನ ಗಂಗಲಾಪುರ ಗ್ರಾಮದಲ್ಲಿ ಇತ್ತೀಚೆಗೆ ಆಂಜನೇಯ ಎನ್ನುವ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಕೊಲೆಗೆ ದಲಿತ ವ್ಯಕ್ತಿ ಮಾಯಣ್ಣ ಕಾರಣ ಎಂದು ಆರೋಪಿಸಿ ಗುಂಪೊಂದು ಮಾಯಣ್ಣ ಎಂಬುವರನ್ನು ಅರೆ ಬೆತ್ತಲೆಗೂಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದೆ.
ಕಳೆದ ವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾದ ಆಂಜನೇಯ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದ್ದು, ಮೃತ ಆಂಜನೇಯ ಮತ್ತು ಮಾಯಣ್ಣ ಮಧ್ಯೆ ಭಿನ್ನಾಭಿಪ್ರಾಯವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕಂಬಕ್ಕೆ ಕಟ್ಟಿ ಥಳಿಸಿದ ವಿಚಾರಕ್ಕೆ ಸಂಬಂಧಿಸಿ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story