ರಾಷ್ಟ್ರಪತಿ ಚುನಾವಣೆ: ಕೇಂದ್ರದಿಂದ ರಾಜ್ಯಕ್ಕೆ ಚುನಾವಣಾ ಸಾಮಗ್ರಿ ರವಾನೆ
ಬೆಂಗಳೂರು, ಜು. 12: ‘ಇದೇ ತಿಂಗಳ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಅವಶ್ಯಕ ಸಾಮಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ಗಳನ್ನು ಹೊಸದಿಲ್ಲಿಯ ಕೇಂದ್ರ ಚುನಾವಣಾ ಆಯೋಗದ ಕೇಂದ್ರ ಕಚೇರಿಯಿಂದ ಆಯಾ ರಾಜ್ಯಗಳಿಗೆ ರವಾನಿಸಲಾಗಿದೆ.
ಕರ್ನಾಟಕ ರಾಜ್ಯದ ‘ಬ್ಯಾಲೆಟ್ ಜರ್ನಿ'ಯ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರು ವಹಿಸಿದ್ದು, ಜು.12ರ ಸಂಜೆ ಹೊಸದಿಲ್ಲಿಯಿಂದ ನಿರ್ಗಮಿಸಿ ರಾತ್ರಿ 8:15ಕ್ಕೆ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಈ ವಿಶೇಷ ಬ್ಯಾಲೆಟ್ ಜರ್ನಿಯ ಮುಖಾಂತರ ರಾಜ್ಯಕ್ಕೆ ಆಗಮಿಸುವ ಮತದಾನದಸಾಮಗ್ರಿಗಳನ್ನು ವಿಧಾನಸೌಧದಲ್ಲಿ ಇದಕ್ಕಾಗಿ ಮೀಸಲಿಟ್ಟಿರುವ ಕೊಠಡಿ ಸಂಖ್ಯೆ 108ರಲ್ಲಿ ಶೇಖರಿಸಿಡಲಾಗುವುದು ಎಂದು ತಿಳಿಸಲಾಗಿದೆ.
ರಾತ್ರಿ 9 ಗಂಟೆಯ ಸುಮಾರಿಗೆ ವಿಧಾನಸೌಧ ತಲುಪಲಿರುವ ಈ ವಿಶೇಷ ಬ್ಯಾಲೆಟ್ ಜರ್ನಿಯನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಸ್ವಾಗತಿಸಲಿದ್ದಾರೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.